ಉಡುಪಿ: ಕುಂದಾಪುರದ ವಾಜಪೇಯಿ ಎಂದೇ ಹೆಸರಾಗಿರುವ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಈ ಕುರಿತು ಅವರು ಅಧಿಕೃತ ಪ್ರಕಟಣೆಯನ್ನು ಕೂಡ ಹೊರಡಿಸಿದ್ದಾರೆ.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತವಾಗಿ ಒಟ್ಟು 5 ಅವಧಿಗೆ ನನ್ನನ್ನು ಬಹುನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ನನ್ನ ಕ್ಷೇತ್ರದ ಎಲ್ಲಾ ಜಾತಿ-ಧರ್ಮದ ಮತದಾರ ಬಾಂಧವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿಶ್ಚಯಿಸಿರುತ್ತೇನೆ ಎಂದು ಅವರು ಘೋಷಿಸಿದ್ದಾರೆ.
ನಾನು ವಿಧಾನಸಭಾ ಸದಸ್ಯನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ಅತ್ಯಂತ ನಿಷ್ಠೆಯಿಂದ ನನ್ನ ಜವಾಬ್ದಾರಿ ನಿರ್ವಹಿಸಿರುತ್ತೇನೆ. ಕುಂದಾಪುರ ವಿಧಾನಸಭಾ ಕ್ಷೇತ್ರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿದ್ದು, ಈ ಕ್ಷೇತ್ರದ ಎಲ್ಲಾ ವರ್ಗದ ಮತದಾರರಿಗೂ ತಮ್ಮ ಬೇಡಿಕೆಗಳನ್ನು ಹೇಳಿಕೊಳ್ಳಲು ಅವಕಾಶ ಕೊಟ್ಟು ಅವರ ನೋವು-ಸಂಕಷ್ಟಗಳಿಗೆ ಸ್ಪಂದಿಸಿ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ನನಗಿದೆ. ಎಲ್ಲಾ ಐದೂ ಚುನಾವಣೆಗಳಲ್ಲಿಯೂ ನನ್ನನ್ನು ದಾಖಲೆ ಮತಗಳ ಅಂತರಗಳಿಂದ ಚುನಾಯಿಸಿ ಕಳುಹಿಸಿದ ಕ್ಷೇತ್ರದ ಎಲ್ಲಾ ಮತದಾರರನ್ನೂ ವಿಶ್ವಾಸಕ್ಕೆ ಪಡೆದು ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿ ಕ್ಷೇತ್ರದ ಮತದಾರರಿಂದ ಪ್ರೀತಿ ವಿಶ್ವಾಸ ಗಳಿಸಿದ ಬಗ್ಗೆ ನನಗೆ ಹೆಮ್ಮೆ ಇದೆ ಎಂದೂ ಅವರು ಹೇಳಿಕೊಂಡಿದ್ದಾರೆ.