ಮಂಡ್ಯ : ಮತ್ತೆ ತಮಿಳುನಾಡಿಗೆ ನೀರು ಬಿಡಲು ನಿಯಂತ್ರಣ ಸಮಿತಿ ಸೂಚನೆ ಹಿನ್ನೆಲೆಯಲ್ಲಿ ಮಂಡ್ಯದ ಸಂಜಯ ವೃತ್ತದಲ್ಲಿ ವಿಶೇಷವಾಗಿ ಭಿಕ್ಷೆ ಪಾತ್ರೆ ಹಿಡಿದು ರೈತರು ಪ್ರತಿಭಟನೆ ನಡೆಸಿದರು.
ಹರಕಲು ಅಂಗಿ, ಚಡ್ಡಿ ಧರಿಸಿ, ಕೆಲವರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ವಿನೂತನ ಹೋರಾಟ ನಡೆದಿದ್ದು, ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯದ ಜನರು ಭಿಕ್ಷೆ ಎತ್ತಬೇಕಾಗುತ್ತೆ ಎಂದು ಅಣಕಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಈಗಾಗಲೇ ನಮ್ಮನ್ನ ಬೀದಿಗೆ ನಿಲ್ಲಿಸಿದೆ ಎಂದು ಕಿಡಿಕಾರಿದರು.
ಕಾವೇರಿ ನಮ್ಮದು, ಕಾವೇರಿ ನಮ್ಮದು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ರಸ್ತೆ ಮೇಲೆ ಉರುಳಾಡಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿ: ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ರೈತ ಸಂಘದ ಆಶ್ರಯದಲ್ಲಿ ರೈತರು ಪ್ರತಿಭಟನೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವ ದೃಢ ನಿರ್ಧಾರ ಮಾಡುವ ಮೂಲಕ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿದರು.
ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಕೆಆರ್ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಸದ್ಯಕ್ಕೆ ಕುಡಿಯುವ ನೀರಿಗೂ ಸಾಕಾಗುವುದಿಲ್ಲ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಮುನ್ನಡೆಯಬೇಕೆಂದರು.
ರೈತ ಸಂಘದ ತಾಲೂಕು ಕಾರ್ಯದರ್ಶಿ ಜಗದೀಶ್ ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಅನ್ಯಾಯವಾಗುತ್ತಿದ್ದು, ನೈರುತ್ಯ ಮುಂಗಾರು ತಿಂಗಳ ಅಂತ್ಯದಲ್ಲಿ ಕೊನೆಯಾಗಲಿದ್ದು, ಕಾವೇರಿ ಕಣಿವೆ ಪ್ರದೇಶಕ್ಕೆ ಮತ್ತೆ ಮಳೆ ಸುರಿಯುವ ಸಾಧ್ಯತೆ ತೀರಾ ಕಡಿಮೆ. ಆದರೆ, ತಮಿಳುನಾಡಿನಲ್ಲಿ ಮಳೆ ಆರಂಭವಾಗಲಿದೆ. ಇದನ್ನ ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ಮಾಡಬೇಕಾಗಿದೆ ಎಂದರು. ಇಂಡವಾಳು ಸಿದ್ದೇಗೌಡ, ಸುರೇಶ್, ನಾಗರಾಜ್ ಗಾಣದಾಳು ನೇತೃತ್ವ ವಹಿಸಿದ್ದರು.