ಬೆಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತಲು 74 ಅನಾಥ ಶವಗಳನ್ನು ಹೂತು ಹಾಕಿರುವ ಆರೋಪ ಸಂಬಂಧ ಆ ಎಲ್ಲ ಪ್ರಕರಣಗಳಲ್ಲೂ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚನೆ ನೀಡಬೇಕು ಎಂದು ಕೋರಿ ಮೃತ ಬೆಳ್ತಂಗಡಿ ವಿದ್ಯಾರ್ಥಿನಿಯ ತಾಯಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಎಲ್ಲ ಅನಾಥ ಶವಗಳು ಮತ್ತು ನಾಪತ್ತೆ ಪ್ರಕರಣದಲ್ಲಿ ಅವರ ಪೋಷಕರಿಗೆ ನ್ಯಾಯ ದೊರಕಿಸಿಕೊಡಬೇಕಾಗಿದ್ದು, ಪ್ರತಿಯೊಂದು ಪ್ರಕರಣಕ್ಕೂ ಪ್ರತ್ಯೇಕ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ನಿರ್ದೇಶನ ನೀಡಬೇಕು ಎಂದು ಮೃತ ವಿದ್ಯಾರ್ಥಿನಿಯ ತಾಯಿ ಈ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ.
ಜೊತೆಗೆ, ಎರಡು ವರ್ಷಗಳವರೆಗೆ ನೂರಾರು ಅನಾಥ ಶವಗಳನ್ನು ಹೂತುಹಾಕಿದ್ದಾಗಿ ಈ ಹಿಂದೆ ಹೇಳಿಕೆ ನೀಡಿದ್ದ ವ್ಯಕ್ತಿ ಇದೀಗ ತದ್ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಬೇಕು ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.
ಅರ್ಜಿಯಲ್ಲಿನ ವಿವರ: ಪ್ರತಿಯೊಂದು ಪ್ರಕರಣದಲ್ಲಿ ಶವ ಹೂತ ಸ್ಥಳದಲ್ಲಿ ಉತ್ಖನನ ಮಾಡಿ ಅವಶೇಷಗಳನ್ನು ವೈಜ್ಞಾನಿಕವಾಗಿ ಹೊರತೆಗೆಯಬೇಕು. ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿ ಡಿಎನ್ಎ ಪರೀಕ್ಷೆಯ ಮೂಲಕ ಮೃತ ವ್ಯಕ್ತಿಗಳನ್ನು ಪತ್ತೆ ಹಚ್ಚಬೇಕು. ತನಿಖೆ ನಡೆಸಿ ಪ್ರತಿಯೊಂದು ಸಾವಿಗೂ ಕಾರಣ ಪತ್ತೆ ಹಚ್ಚಬೇಕು. ಸಾಕ್ಷಿಗಳನ್ನು ಗುರುತಿಸಿ, ಅವರ ಹೇಳಿಕೆಗಳನ್ನು ದಾಖಲಿಸಬೇಕು. ಆರೋಪಿಗಳನ್ನು ಪತ್ತೆ ಹಚ್ಚಿ ಅವರನ್ನು ವಿಚಾರಣೆಗೆ ಒಳಪಡಿಸುಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ ಕಾಣೆಯಾದ ವ್ಯಕ್ತಿಗಳನ್ನು ಹುಡುಕಾಟ ನಡೆಸುತ್ತಿರುವ ಕುಟುಂಬಸ್ಥರನ್ನು ಪತ್ತೆ ಹಚ್ಚುವುದಕ್ಕಾಗಿ ಅವರಿಗೆ ಮಾಹಿತಿ ನೀಡಲು ಆಂಗ್ಲ ಮತ್ತು ಕನ್ನಡ ಭಾಷೆಯ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸಬೇಕು. ಕಾಣೆಯಾದವರ ಕುಟುಂಬಸ್ಥರ ನೇರವಾಗಿ ಎಸ್ಐಟಿ ಅಧಿಕಾರಿಗಳನ್ನು ಭೇಟಿಗೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಬೇಕು ಎಂದು ಎಸ್ಐಟಿ ತಂಡಕ್ಕೆ ನಿರ್ದೇಶನ ನೀಡಬೇಕು. ಅಲ್ಲದೇ, ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ತಮ್ಮ ತನಿಖಾ ವರದಿಯನ್ನು ಮಾಸಿಕವಾಗಿ ನ್ಯಾಯಾಲಯಕ್ಕೆ ಸಲ್ಲಿಸುವುದು, ವರದಿಯನ್ನು ಆಧರಿಸಿ ನ್ಯಾಯಾಲಯವೇ ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.
Laxmi News 24×7