ಬೆಳಗಾವಿ: ‘ನೂತನ ಗಾಂಧಿ ಭವನ ಆವರಣದಲ್ಲಿ ಒಂದು ವರ್ಷದೊಳಗೆ ಬಯಲು ರಂಗಮಂದಿರ ಮತ್ತು ಡಿಜಿಟಲ್ ಲೈಬ್ರರಿ ನಿರ್ಮಿಸಲಾಗುವುದು’ ಎಂದು ದಕ್ಷಿಣ ಶಾಸಕ ಅಭಯ ಪಾಟೀಲ ಭರವಸೆ ನೀಡಿದರು.
ತಾಲ್ಲೂಕಿನ ಪೀರನವಾಡಿಯಲ್ಲಿ ಸೋಮವಾರ ನಡೆದ ಗಾಂಧಿ ಭವನ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದರು. ಆ ಐತಿಹಾಸಿಕ ಕ್ಷಣಕ್ಕೆ 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಈ ಭವನದಲ್ಲಿ ಸರ್ಕಾರದಿಂದ ಒಂದು ವರ್ಷದವರೆಗೆ ನಿರಂತರವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.
ಗಾಂಧಿ ಭವನ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ‘ರಾಷ್ಟ್ರಪಿತ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸಾ ಗುಣಗಳು ಯುವ ಸಮುದಾಯಕ್ಕೆ ಪ್ರೇರಕವಾಗಿವೆ. ರಾಮ ರಾಜ್ಯ, ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದ ಮಹಾತ್ಮ ಗಾಂಧಿ ಅವರ ಆಶಯಗಳನ್ನು ನಮ್ಮ ಸರ್ಕಾರ ನನಸಾಗಿಸುವಲ್ಲಿ ನಿರತವಾಗಿದೆ’ ಎಂದು ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಪ್ರಾಸ್ತಾವಿಕವಾಗಿ ಮಾತನಾಡಿದರು.