ಬೆಳಗಾವಿ: ಮುಂಗಾರು ಅವಧಿಯಲ್ಲಿ ತೀವ್ರ ಮಳೆ ಕೊರತೆಯಿಂದ ಹೆಸರು, ಉದ್ದು, ಶೇಂಗಾ, ಸೂರ್ಯಕಾಂತಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿದ್ದು, ರೈತರಿಗೆ ಮಧ್ಯಂತರ ಬೆಳೆ ಹಾನಿ ಪರಿಹಾರವಾಗಿ ₹11 ಕೋಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ತಿಳಿಸಿದರು.
ರಾಮದುರ್ಗ, ಸವದತ್ತಿ ಹಾಗೂ ಯರಗಟ್ಟಿ ತಾಲೂಕುಗಳಲ್ಲಿ ಸುಮಾರು 29 ಸಾವಿರ ಎಕರೆ ಪ್ರದೇಶದಲ್ಲಿ ಹೆಸರು ಮತ್ತು ಉದ್ದು ಬೆಳೆ ಹಾನಿಯಾಗಿದೆ. ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವಾಗುವ ಉದ್ದೇಶದಿಂದ ವಿಮಾ ಕಂಪನಿಗಳ ಮೂಲಕ ಮಧ್ಯಂತರ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು.
ಅಂದಾಜು 25 ಸಾವಿರ ರೈತರಿಗೆ ಪ್ರತಿ ಎಕರೆಗೆ ಗರಿಷ್ಠ ₹2,500 ವರೆಗೆ ಬೆಳೆ ಹಾನಿ ಪರಿಹಾರ ದೊರೆಯಲಿದ್ದು, ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆಯಾಗಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಮಧ್ಯಂತರ ಪರಿಹಾರದಿಂದ ತುಸು ನೆರವಾಗಲಿದ್ದು, ಉಳಿದಂತೆ ಬೆಳೆ ಪರಿಸ್ಥಿತಿ ಹಾಗೂ ಹಾನಿಯ ಪ್ರಮಾಣವನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
Laxmi News 24×7