ಮೈಸೂರು : ಸಂಸದ ಪ್ರತಾಪಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ.
ಬಳಿಕ ಅದರ ಅನುಭವವನ್ನು ನಮಗೆ ಬಂದು ಹೇಳಲಿ ಎಂದು ಶಾಸಕ ತನ್ವೀರ್ ಸೇಠ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದ ಮುಸ್ಲಿಂ ಕುಟುಂಬಗಳಲ್ಲಿ ಒಡಕು ಉಂಟಾಗುತ್ತದೆ. ಮುಸ್ಲಿಮರಿಗೆ ಎರಡು ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಎಂದು ಗುರುತಿಸುತ್ತಿರಾ ಎಂದಿದ್ದ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರತಾಪ್ ಸಿಂಹಗೆ ಅಷ್ಟೊಂದು ಆಸೆ ಇದ್ದರೆ ಇನ್ನೊಂದು ಮದುವೆಯಾಗಿ ಅನುಭವವನ್ನು ನಮಗೆ ಹೇಳಲಿ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಹೊಂದಾಣಿಕೆ ರಾಜಕಾರಣದ ಬಗ್ಗೆ ಮಾತನಾಡಿ, ಹೊಂದಾಣಿಕೆ ರಾಜಕೀಯ ನನಗೆ ಗೊತ್ತಿಲ್ಲ. ಆ ರೀತಿ ಮಾಡಿರುವವರಿಗೆ ಆ ವಿಚಾರ ಗೊತ್ತು. ಹೊಂದಾಣಿಕೆ ಮಾಡಿಕೊಂಡು ಒಬ್ಬರನ್ನು ತುಳಿಯಲು ಮತ್ತೊಬ್ಬರನ್ನು ಬಳಸಿಕೊಳ್ಳೋದು ಸರಿಯಲ್ಲ. ಅದರ ಅನುಭವ ಇರುವವರು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ವಿಚಾರವಾಗಿ ಮಾತನಾಡಿ, ವಿದ್ಯುತ್ ದರ ಹೆಚ್ಚಳಕ್ಕೆ ಹಿಂದಿನ ಬಿಜೆಪಿ ಸರ್ಕಾರ ನೇರ ಕಾರಣ. ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್ಸಿ ಮಾಡಿದ್ದ ಶಿಫಾರಸ್ಸಿಗೆ ಈ ಹಿಂದಿನ ಬಿಜೆಪಿ ಸರಕಾರ ಒಪ್ಪಿಗೆ ಸೂಚಿಸಿದೆ. ಬಿಜೆಪಿಯವರಿಗೆ ಚುನಾವಣೆಯಲ್ಲಿ ಸೋಲುವುದು ಖಚಿತವಾಗಿದ್ದರಿಂದ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರ ಮೇ 12ರಂದು ಪ್ರಕಟವಾಗಿದೆ ಎಂದು ತಿಳಿಸಿದರು. ಮೇ 13ರಂದು ಚುನಾವಣಾ ಫಲಿತಾಂಶ ಹೊರ ಬಿದ್ದಾಗ ಶಾಕ್ ಕೊಡುವ ಕೆಲಸ ಮಾಡಿದ್ದಾರೆ. ಹೀಗಾಗಿ ನಾನು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದರು.
Laxmi News 24×7