ಬೆಂಗಳೂರು: ಅನ್ನಭಾಗ್ಯದಡಿ ಅಕ್ಕಿ ಸಿಗದ ಕಾರಣ ಅಕ್ಕಿ ಬದಲಿಗೆ ಬಿಪಿಎಲ್ ಕಾರ್ಡುದಾರಿಗೆ ಹಣ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಫ್ಸಿಐ ದರ ಪ್ರತಿ ಕೆಜಿಗೆ 34 ರೂಪಾಯಿಯಂತೆ ಬಿಪಿಎಲ್ ಕಾರ್ಡ್ ಕುಟುಂಬದವರಿಗೆ ಹಣ ಪಾವತಿ ಮಾಡಲು ತೀರ್ಮಾನಿಸಲಾಗಿದೆ. ಮನೆಯ ಯಜಮಾನನ ಖಾತೆಗೆ ಕುಟುಂಬ ಸದಸ್ಯರ ಹಣವನ್ನೂ ಪಾವತಿ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದರು.
ಸಚಿವ ಸಂಪುಟ ಸಭೆ ಬಳಿಕ ಸಚಿವರು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದರು. ಅಕ್ಕಿ ಪಡೆಯಲು ಸಾಕಷ್ಟು ಪ್ರಯತ್ನ ಮಾಡಲಾಗಿದೆ. ಕೇಂದ್ರ ಸಚಿವ ಪಿಯೂಷ್ ಗೊಯೇಲ್ ಅವರನ್ನು ಭೇಟಿ ಮಾಡಿದ್ದೆ. ಎಫ್ಸಿಐನಲ್ಲಿ ಅಕ್ಕಿ ಸಂಗ್ರಹ ಹೆಚ್ಚಿದ್ದು, ಅಕ್ಕಿ ಕೊಡುವಂತೆ ಮನವಿ ಮಾಡಿದ್ದೆವು. ಆದರೆ ಅವರು ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ್ದಾರೆ. ಇದರಲ್ಲಿ ರಾಜಕೀಯ ಮಾಡಲಾಗಿದೆ. ಅಕ್ಕಿ ಕೊಡುವುದಾಗಿ ನಾವು ರಾಜ್ಯದ ಜನರಿಗೆ ಮಾತು ಕೊಟ್ಟಿದ್ದೇವೆ. 1 ಕೆ.ಜಿಗೆ 34 ರೂ.ನಂತೆ ಬಿಪಿಎಲ್ ಕಾರ್ಡುದಾರರಿಗೆ ಹಣ ಪಾವತಿ ಮಾಡಲಾಗುವುದು ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದರು.
ಕೇಂದ್ರ ಸರ್ಕಾರ ನಮಗೆ ಸಹಕರಿಸದ ಕಾರಣ ನಾವು ಮಾತುಕೊಟ್ಟಂತೆ ಅಕ್ಕಿಯ ಬದಲು ಹಣ ಕೊಡುತ್ತೇವೆ. ಜುಲೈಯಿಂದ ಕೆ.ಜಿಗೆ 34 ರೂ.ನಂತೆ ಕುಟುಂಬದ ಸದಸ್ಯರಿಗೆ ಅಕ್ಕಿಯ ಹಣ ನೀಡಲಾಗುತ್ತದೆ. ಒಂದು ತಿಂಗಳಿಗೆ 750ರಿಂದ 800 ಕೋಟಿ ರೂ. ಹಣ ಬೇಕಾಗುತ್ತದೆ. ಅಕ್ಕಿ ವಿಚಾರವಾಗಿ ಟೆಂಡರ್ ಕರೆಯಲಾಗುತ್ತದೆ. ಟೆಂಡರ್ ಅಂತಿಮವಾದ ಬಳಿಕ ಅಕ್ಕಿ ಕೊಡುತ್ತೇವೆ ಎಂದು ಸಚಿವರು ತಿಳಿಸಿದರು.