ಶಿವಮೊಗ್ಗ: ತಡರಾತ್ರಿ ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶವಾದ ಬ್ಯಾಕೋಡು ಸಮೀಪದ ಎಸ್.ಎಸ್.ಬೋಗ್ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಮರಾಠಿ ಗ್ರಾಮದ ಗಣೇಶ್ (47) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬುಧವಾರ ರಾತ್ರಿ ಸುಮಾರು 3 ಗಂಟೆಗೆ ಘಟನೆ ನಡೆದಿದೆ. ಗಣೇಶ್ ತಮ್ಮ ಗುಡಿಸಲಿನಲ್ಲಿ ಮಲಗಿದ್ದರು. ಈ ವೇಳೆ ನುಗ್ಗಿದ ಹುಲಿ ದಾಳಿ ನಡೆಸಿದೆ. ಇದರಿಂದಾಗಿ ಗಣೇಶ್ ಅವರ ಬಲಗೈಗೆ ಗಂಭೀರ ಸ್ವರೂಪದ ಗಾಯವಾಗಿದೆ. ಹುಲಿ ಕಂಡ ಕೂಡಲೇ ಅವರು ಜೋರಾಗಿ ಕಿರುಚಿಕೊಂಡಿದ್ದಾರೆ. ಇದರಿಂದ ಬೆದರಿದ ಹುಲಿ ಸ್ಥಳದಿಂದ ಓಡಿಹೋಗಿದೆ.
ಅಷ್ಟರಲ್ಲಿ ಅಕ್ಕಪಕ್ಕದ ಮನೆಯವರು ಧಾವಿಸಿ ಬಂದಿದ್ದಾರೆ. ಗಾಯಾಳುವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಆದರೆ ಹುಲಿ ಪತ್ತೆಯಾಗಿಲ್ಲ.