ಬೆಂಗಳೂರು: ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಇಂದು ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗದ ಭೇಟಿ ವೇಳೆ ಮಾತನಾಡಿದ ಅವರು, ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಸಿಎಂ ತಿಳಿಸಿದರು.
ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ವಿದ್ಯಾರ್ಥಿ ಹಾಗೂ ದಲಿತ ಚಳವಳಿಗಳು ಹಾಗೂ ಜನಪರವಾದ ಇತರೆ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿ ಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಕುರಿತು ಬೇಡಿಕೆಗಳನ್ನು ಸಲ್ಲಿಸಲಾಯಿತು.
ಕ್ರೈಸ್ತರೂ ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ- ಸಿಎಂ: ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಅಭಯ ನೀಡಿದರು. ಗೃಹಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಸಿಎಂ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತ ಚರ್ಚಿಸಿದರು. ಮತಾಂತರ ನಿಷೇಧ ಕಾಯ್ದೆಗೆ ತರಲಾಗಿದ್ದ ಸಂವಿಧಾನ ವಿರೋಧಿ ತಿದ್ದುಪಡಿಯನ್ನು ರದ್ದುಮಾಡಲು ನಿರ್ಧರಿಸಲಾಗಿದೆ. ಮತಾಂತರ ನಿಷೇಧ ಕಾಯ್ದೆಯಡಿ ಪಾದ್ರಿಗಳ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.