ಬೆಂಗಳೂರು: ನಾನು ಕೆಪಿಸಿಸಿಯ ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ನಾನು ಆಲ್ ಇಂಡಿಯಾ ಕಾಂಗ್ರೆಸ್ ಜನರಲ್ ಸೆಕ್ರೆಟರಿ (All India Congress General Secretary) ಆಗಿದ್ದವನು. ಈಗ ಕೆಪಿಸಿಸಿ ಉಪಾಧ್ಯಕ್ಷ, ಕಾರ್ಯಾಧ್ಯಕ್ಷನಾಗೋದಿಲ್ಲ. ಡಿ.ಕೆ. ಶಿವಕುಮಾರ್ (DK Shivakumar) ಕೆಪಿಸಿಸಿ ಅಧ್ಯಕ್ಷರಾಗಿ (KPCC president) ಕಾರ್ಯನಿರ್ವಹಿಸುತ್ತಿದ್ದಾರೆ.
ನಾನು ಅವರ ಕೈಕೆಳಗೆ ಕೆಲಸ ಮಾಡೋದಿಲ್ಲ. ನಾನು ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದವನು. ಕಾರ್ಯಾಧ್ಯಕ್ಷ ಹುದ್ದೆಯನ್ನು ಬಯಸುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ (BK Hariprasad) ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಕೆ. ಹರಿಪ್ರಸಾದ್, ಚುನಾವಣೆ ಬಳಿಕ ಸ್ಥಾನ ಬದಲಾವಣೆ ಬಗ್ಗೆ ಮಾತನಾಡಲು ನಾನು ಜ್ಯೋತಿಷಿ ಅಲ್ಲ. ನನಗೆ ರಾಜ್ಯಕ್ಕಿಂತ, ರಾಷ್ಟ್ರ ರಾಜಕಾರಣ ಮುಖ್ಯ. ನರೇಂದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಸಬೇಕು ಎಂದು ಹೇಳಿದರು.
ಸಚಿವ ಸ್ಥಾನ ಕೊಡಲಿಲ್ಲ ಅಂತ ಅಸಮಾಧಾನ ಇಲ್ಲ. ನಾನು ಎಂದೂ ಸಚಿವ ಸ್ಥಾನ ಕೇಳಿಲ್ಲ. ಇರುವ ವ್ಯವಸ್ಥೆ ವಿರುದ್ಧ ಅಷ್ಟೇ ನನ್ನ ಅಸಮಾಧಾನ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಮೇಲ್ಮನೆಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಸರ್ಕಾರದ ಕೆಲ ವಿಚಾರದ ಬಗ್ಗೆ ಅಷ್ಟೇ ನನ್ನ ಅಸಮಾಧಾನ ಎಂದು ಹೇಳಿದರು.
ದೆಹಲಿ ಸಭೆಯು ಚೆನ್ನಾಗಿ ನಡೆಯಿತು. ಮುಂದಿನ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಹೇಗೆ ಭಾಗಿಯಾಗಬೇಕು ಎಂಬ ಬಗ್ಗೆ ಚರ್ಚೆಯಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವುದು ನಮ್ಮ ಗುರಿ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದರು.