Breaking News

ಗರ್ಭಿಣಿ ವಕೀಲೆಗೆ ಮನೆ ಬಳಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಿದ ಹೈಕೋರ್ಟ್

Spread the love

ಬೆಂಗಳೂರು: ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಯೊಬ್ಬರಿಗೆ ಮನೆ ಬಳಿಯೇ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿ ಮುಖ್ಯ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದೆ.

ಹೈಕೋರ್ಟ್​ನ ಬೆಂಗಳೂರು ಪೀಠದಲ್ಲಿ ಮುಖ್ಯ ಪರೀಕ್ಷೆ ನಡೆಯುತ್ತಿದೆ. ಆದರೂ ಗರ್ಭಿಣಿಯಾಗಿರುವ ವಕೀಲೆ ನೇತ್ರಾವತಿ ಎಂಬುವವರು ಬೆಂಗಳೂರಿಗೆ ಆಗಮಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ನವೆಂಬರ್ 18 ಮತ್ತು 19ರಂದು ನಡೆಯಲಿರುವ ಮುಖ್ಯ ಪರೀಕ್ಷೆಗೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರುವ ನೇತ್ರಾವತಿ ಅವರು ಎಂಟೂವರೆ ತಿಂಗಳ ಗರ್ಭಿಣಿ ಆಗಿರುವುದರಿಂದ ಅವರ ಆರೋಗ್ಯ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಪ್ರವಾಸ ಮಾಡಲಾಗದು. ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಪಿ. ಎಸ್. ದಿನೇಶ್ ಕುಮಾರ್, ಕೆ. ಸೋಮಶೇಖರ್, ಎಸ್. ಸುನಿಲ್ ದತ್ ಯಾದವ್, ಅಶೋಕ್ ಎಸ್. ಕಿಣಗಿ ಮತ್ತು ಎಂ ನಾಗಪ್ರಸನ್ನ ಅವರನ್ನು ಒಳಗೊಂಡ ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಮಿತಿಯು ನೇತ್ರಾವತಿ ಅವರ ಕೋರಿಕೆಗೆ ಒಪ್ಪಿಗೆ ಸೂಚಿಸಿದ್ದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿಗಳೂ ಅನುಮತಿ ನೀಡಿದ್ದಾರೆ.

ನೇತ್ರಾವತಿ ಅವರು ಪರೀಕ್ಷೆ ಬರೆಯಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಪರೀಕ್ಷಾ ಕೇಂದ್ರಕ್ಕೆ ನ್ಯಾಯಾಂಗ ಅಧಿಕಾರಿಯನ್ನು ವೀಕ್ಷಕರನ್ನಾಗಿ ವಿಶೇಷವಾಗಿ ನಿಯೋಜಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮೇಲ್ವಿಚಾರಣೆ ನಡೆಸಲಿದ್ದು, ತುರ್ತು ಸಂದರ್ಭ ಉದ್ಭವಿಸಿದರೆ ವೈದ್ಯಕೀಯ ವ್ಯವಸ್ಥೆ ಮಾಡುವಂತೆ ಅವರಿಗೆ ನಿರ್ದೇಶಿಸಲಾಗಿದೆ.

ಕರ್ನಾಟಕ ಹೈಕೋರ್ಟ್ 2023ರ ಮಾರ್ಚ್ 9ರಂದು 57 ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಜುಲೈ 23ರಂದು ಪ್ರಾಥಮಿಕ ಪರೀಕ್ಷೆ ನಡೆಸಲಾಗಿದ್ದು, 6 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 1,022 ಮಂದಿ ಮುಖ್ಯ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ. ಅವರಲ್ಲಿ ನೇತ್ರಾವತಿ ಅವರೂ ಒಬ್ಬರಾಗಿದ್ದಾರೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ