Breaking News

2ಎ ಮೀಸಲಾತಿಗೆ ಆಗ್ರಹಿಸಿ ಡಿ.5ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಹಾಲಿ, ಮಾಜಿ ಶಾಸಕರ ಸಭೆ

Spread the love

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಚಳಿಗಾಲ ಅಧಿವೇಶನ ವೇಳೆ ಸರ್ಕಾರದ ಗಮನ ಸೆಳೆಯಲು ಡಿ.5ರಂದು ಬೆಳಗಾವಿಯಲ್ಲಿ ಸಮಾಜದ ಹಾಲಿ – ಮಾಜಿ ಶಾಸಕರ ಸಭೆ ಕರೆದಿದ್ದೇವೆ. ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಮಂತ್ರಿಸಲು ನಿರ್ಧರಿಸಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯ ಕಾರಿಣಿ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳನ್ನು ಸಭೆಗೆ ಕರೆದುಕೊಂಡು ಬರಲು ಆಡಳಿತ ಪಕ್ಷದ ಐವರು ಶಾಸಕರಿಗೆ ಮನವಿ ಮಾಡಿದ್ದೇವೆ. ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ, ಶಾಸಕರಾದ ವಿಜಯಾನಂದ ಕಾಶಪ್ಪನವರ, ವಿನಯ ಕುಲಕರ್ಣಿ, ಮಾಜಿ ಸಚಿವ ಎಬಿ ಪಾಟೀಲ ಅವರಿಗೆ ಜವಾಬ್ದಾರಿ ನೀಡಲಾಗಿದೆ. ನಮ್ಮ ಹೋರಾಟ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ‌ಸಿಎಂಗೆ ಮನವಿ ಮಾಡುತ್ತೇವೆ ಎಂದರು.

ಇದೇ ಅಧಿವೇಶನ ವೇಳೆ ಸುವರ್ಣಸೌಧ ಎದುರು ಇಷ್ಟಲಿಂಗ ಪೂಜೆ‌ ಮೂಲಕ ಹೋರಾಟ ನಡೆಸಲಿದ್ದೇವೆ. ಸಿಎಂ ಸಭೆ ಬಳಿಕ ನಮ್ಮ ಶಾಸಕರ ಜೊತೆಗೆ ಚರ್ಚಿಸಿ ದಿನಾಂಕ ನಿಗದಿ ಮಾಡುತ್ತೇವೆ. ಲೋಕಸಭೆ ಚುನಾವಣೆ ಒಳಗೆ ರಾಜ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು. ಎಲ್ಲ ಲಿಂಗಾಯತ ಒಳಪಂಗಡಗಳನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರಿಸಬೇಕು‌. ಇಲ್ಲವಾದರೆ ಬೆಂಗಳೂರು, ಬೆಳಗಾವಿ, ಕೂಡಲಸಂಗಮದಲ್ಲಿ ಬೃಹತ್ ಸಮಾವೇಶ ನಡೆಸಬೇಕಾಗುತ್ತದೆ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೂಡಲಸಂಗಮ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಮೂರು ವರ್ಷಗಳಿಂದ ಹೋರಾಟ ಮಾಡಿ ರಾಜ್ಯ ಹಾಗೂ ಕೇಂದ್ರದ ಮೇಲೆ ಒತ್ತಡ ಹೇರುತ್ತಿದ್ದೇವೆ. ರಾಜ್ಯದಲ್ಲಿ ಹೊಸ ಸರ್ಕಾರ ಬಂದ ಬಳಿಕ ನಮ್ಮ ನಿಯೋಗ ಸಿಎಂ ಭೇಟಿ ಮಾಡಿ ಚರ್ಚಿಸಿತ್ತು. ಹಿಂದುಳಿದ ಆಯೋಗದ ವರದಿ ಪಡೆದು ಚರ್ಚೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆಯಲಿಲ್ಲ, ಹೀಗಾಗಿ ಹೋರಾಟ ಮರಳಿ ಆರಂಭಿಸಿದ್ದೇವೆ. ಶ್ರಾವಣ ಮಾಸದಲ್ಲಿ ಇಷ್ಟಲಿಂಗ ಪೂಜೆ ಮೂಲಕ ನಿಪ್ಪಾಣಿಯಿಂದ ಹೋರಾಟ ಆರಂಭಿಸಿದ್ದೆವು. ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಧಾರವಾಡದಲ್ಲೂ ಹೋರಾಟ ಮಾಡಿದ್ದೇವೆ. ಹೀಗಿದ್ದರೂ ನಮ್ಮ ಸಮಾಜದ ಬಗ್ಗೆ ಕೇಂದ್ರ ‌ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮುಂದುವರೆದಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.

 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ