ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲ್ಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆ ಮಾಡಲಾಯಿತು.
23 ದಿನಗಳ ಅವಧಿಯಲ್ಲಿ 2 ಕೋಟಿ ರೂ. ಸಂಗ್ರಹವಾಗಿದೆ.
ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆದಿದ್ದು, ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಸಂಗ್ರಹವಾಗಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಭಕ್ತರು ಭೇಟಿ ನೀಡಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ, ಸರ್ಕಾರಿ ರಜೆ ದಿನಗಳು, ದೀಪಾವಳಿ, ಜಾತ್ರಾ ಮಹೋತ್ಸವ, ಕಾರ್ತಿಕ ಸೋಮವಾರ ಹಿನ್ನೆಲೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,00,41,724 ರೂ. ಸಂಗ್ರಹವಾಗಿದೆ. ಕಳೆದ ತಿಂಗಳು ಚಿನ್ನದ ಮೌಲ್ಯಮಾಪಕರಿಗೆ ಅನಾರೋಗ್ಯ ಇದ್ದ ಹಿನ್ನೆಲೆ ಈ ಬಾರಿ ಮೌಲ್ಯಮಾಪನ ಮಾಡಲಾಗಿದೆ. ಕಳೆದ ತಿಂಗಳು ಚಿನ್ನ 24 ಗ್ರಾಂ, ಬೆಳ್ಳಿ ಒಂದು ಕೆಜಿ 915 ಗ್ರಾಂ ಸಂಗ್ರಹವಾಗಿದೆ. ಈ ಬಾರಿ ಚಿನ್ನ 76 ಗ್ರಾಂ ಮತ್ತು ಬೆಳ್ಳಿ 1 ಕೆಜಿ 514 ಗ್ರಾಂ ಸಂಗ್ರಹವಾಗಿದೆ. ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಈ ಹಿಂದೆ, ₹2 ಕೋಟಿಗೂ ಹೆಚ್ಚು ಹಣ ಸಂಗ್ರಹ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಕಳೆದ ನವೆಂಬರ್ನಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು. ನವೆಂಬರ್ನ 28 ದಿನಗಳ ಅವಧಿಯಲ್ಲಿ ಹುಂಡಿಯಲ್ಲಿ 2.10 ಕೋಟಿ ರೂ. ಸಂಗ್ರಹವಾಗಿತ್ತು. ಬೆಟ್ಟದ ಬಸ್ ನಿಲ್ದಾಣ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿತ್ತು. ಹುಂಡಿಗಳ ಎಣಿಕೆಯಲ್ಲಿ 2,10,78,014 ರೂಪಾಯಿ ಸಂಗ್ರಹ ಆಗಿತ್ತು. ಪ್ರಾಧಿಕಾರದ ವತಿಯಿಂದ ಭಕ್ತಾದಿಗಳಿಗೆ ಎಷ್ಟೇ ಅರಿವು ಮೂಡಿಸಿದರೂ ಸಹ ಚಲಾವಣೆಯಲ್ಲಿಲ್ಲದ ಎರಡು ಸಾವಿರ ಮುಖಬೆಲೆಯ 32 ನೋಟುಗಳು ಹುಂಡಿಯಲ್ಲಿ ದೊರೆತಿದ್ದವು.
Laxmi News 24×7