ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್ (Congress) ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ ಎಂಬುದು ಈಗಾಗಲೇ ಪಕ್ಷದ ಆಂತರಿಕ ಸರ್ವೇ ವರದಿಗಳಲ್ಲಿ ಬಹಿರಂಗವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ (Saleem Ahmed) ತಿಳಿಸಿದ್ಧಾರೆ.
ಭಾನುವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ನ ಗ್ಯಾರಂಟಿ ಹಾಗೂ ಕೇಂದ್ರದಲ್ಲಿ ಬಿಜೆಪಿಯ 10 ವರ್ಷಗಳ ದುರಾಡಳಿತ ಕಾಂಗ್ರೆಸ್ಗೆ ಗೆಲುವು ತಂದುಕೊಡಲಿದೆ. ಈಗಾಗಲೇ ಬಿಜೆಪಿಯವರಿಗೆ ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂಬ ಅರಿವಾಗಿದೆ. ಹೀಗಾಗಿ ಅಮಿತ್ ಶಾ ರಾಜ್ಯಕ್ಕೆ ಬಂದು ಪಕ್ಷದ ಸಭೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ, ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಫೆಬ್ರವರಿ ಅಂತ್ಯದ ವೇಳೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ಸಂಬಂಧಿಸಿದ ಅರ್ಹರ ಪಟ್ಟಿಯನ್ನು ಕೆಪಿಸಿಸಿಯಿಂದ ಎಐಸಿಸಿಗೆ ಕಳುಹಿಸಲಾಗಿದ್ದು, ಪರಿಶೀಲನೆ ಹಾಗೂ ಸರ್ವೇ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.