ಬೆಂಗಳೂರು: ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿ ಬಿದ್ದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದರು.
ಚುನಾವಣಾ ಬಾಂಡ್ ರೂಪದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಒಂದಷ್ಟು ಹಣ ಬಂದಿದೆ. ಆದರೆ, ಅದು ಸಹಜವಾಗಿ ಬಂದಿರುವಂತದ್ದು. ಅದು ಯಾವುದೇ ಇಡಿ, ಸಿಬಿಐ ಇನ್ನಿತರ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ ವಸೂಲಿ ಮಾಡಿರುವಂತದ್ದಲ್ಲ ಎಂದು ಸಮರ್ಥಿಸಿಕೊಂಡರು
.ಚುನಾವಣಾ ಬಾಂಡ್ ವಿಷಯ ಇಷ್ಟಕ್ಕೇ ನಿಲ್ಲುವುದಿಲ್ಲ. ಇದರ ಆಳ ಬಹಳ ಇದೆ. ಇದು ಇನ್ನೂ ಮುಂದುವರಿಯಲಿದೆ. ಚುನಾವಣಾ ಬಾಂಡ್ಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳನ್ನೂ ತನಿಖೆಗೆ ಒಳಪಡಿಸಲಿ. ಚುನಾವಣಾ ಬಾಂಡ್ ವ್ಯವಸ್ಥೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಸಾಧ್ಯ ಎಂದು ಭಾವಿಸಲಾಗಿತ್ತು. ಆದರೆ, ಇದರ ದುರುಪಯೋಗವೇ ಜಾಸ್ತಿಯಾಗಿದೆ ಎಂದು ಹೇಳಿದರು.