ಬೆಂಗಳೂರು: ಮನಪರಿವರ್ತನಾ ಕೇಂದ್ರವಾಗಬೇಕಿದ್ದ ಪರಪ್ಪನ ಅಗ್ರಹಾರ ಜೈಲು ಅಕ್ರಮ ಚಟುವಟಿಕೆಗಳ ತಾಣವಾಗಿ ಪರಿಣಮಿಸಿದೆ.
ಪರಪ್ಪನ ಅಗ್ರಹಾರ ಜೈಲಿನಿಂದಲೇ ಉಗ್ರ ಚಟುವಟಿಕೆ, ಕೊಲೆಗೆ ಸುಪಾರಿ ಸೇರಿ ವಿವಿಧ ಅಕ್ರಮ ಚುಟವಟಿಕೆ ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೈಲಿನಿಂದಲೇ ಮತದಾರರ ಮೇಲೆ ಪ್ರಭಾವ ಬೀರಲು ಸಂಚು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮಂಗಳವಾರ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಳಗ್ಗೆ 8 ಗಂಟೆ ಸುಮಾರಿಗೆ ಸುಮಾರು 50ಕ್ಕೂ ಹೆಚ್ಚು ಮಂದಿ ಸಿಸಿಬಿ ಅಧಿಕಾರಿ-ಸಿಬ್ಬಂದಿ ತಂಡ ಜೈಲಿನ ಎಲ್ಲಾ ಬ್ಯಾರಕ್ಗಳ ಮೇಲೆ ದಾಳಿ ನಡೆಸಿದೆ. ಈ ವೇಳೆ ಕೆಲ ಬ್ಯಾರಕ್ನಲ್ಲಿದ್ದ ಆರೋಪಿಗಳ ಬಳಿ ೪೦ ಸಾವಿರ ರೂ. ನಗದು ಮತ್ತು ಮೂರು ಚಾಕುಗಳು ಪತ್ತೆೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ಕೆಲ ದಿನಗಳಲ್ಲಿ ಲೋಕಸಭಾ ಚುನಾವಣೆ ಆರಂಭವಾಗಿದೆ. ಈ ಬೆನ್ನಲ್ಲೇ ಜೈಲಿನಲ್ಲಿರುವ ಕೆಲ ರೌಡಿಶೀಟರ್ಗಳು, ತಮ್ಮ ಸಹಚರರ ಮೂಲಕ ಮತದಾರರ ಮೇಲೆ ಪ್ರಭಾವ ಬೀರುವ ಮಾಹಿತಿ ಇತ್ತು. ಹೀಗಾಗಿ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು,
ಕಾನೂನು ಬಾಹಿರ ಚಟುವಟಿಕೆಗಳು ನಡೆಯಬಾರದು, ಮತದಾರರಿಗೆ ಯಾವುದೇ ತೊಂದರೆ ಉಂಟಾಗಬಾರದು ಎಂಬ ಉದ್ದೇಶದಿಂದ ದಾಳಿ ನಡೆಸಲಾಗಿದೆ. ಈ ವೇಳೆ ೪೦ ಸಾವಿರ ರೂ. ನಗದು, ಮೂರು ಚಾಕು ಪತ್ತೆೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.