ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಆದಿಯಾಗಿ ಎಲ್ಲರೂ ಭಾಗಿಯಾಗಿದ್ದಾರೆ. ಹೀಗಾಗಿ ಮೊದಲು ಮಂತ್ರಿಯನ್ನು ಬಂಧಿಸಬೇಕು. ನಂತರ ಸಿಬಿಐ ತನಿಖೆಗೆ ವಹಿಸಬೇಕು. ಆಗ ಸಿಎಂ ಇದರಲ್ಲಿ ಹೇಗೆ ಭಾಗಿಯಾಗಿದ್ದಾರೆಂಬ ಸಂಗತಿ ಗೊತ್ತಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳುವುದರಲ್ಲಿ, ದಾರಿ ತಪ್ಪಿಸುವಲ್ಲಿ ನಿಸ್ಸೀಮವಾಗಿದೆ. ಇದೀಗ ವಾಲ್ಮೀಕಿ ನಿಗಮದ ಹಗರಣದಲ್ಲಿ ಯಾವುದೇ ಸಂಪರ್ಕವಿಲ್ಲದ ಒಂಬತ್ತು ಕಂಪನಿಗಳಿಗೆ ಹಣ ವರ್ಗಾವಣೆಯಾಗಿದೆ. ಇಷ್ಟಾದರೂ ಆರೋಪ ಹೊತ್ತಿರುವ ಸಚಿವನಿಂದ ರಾಜೀನಾಮೆ ಕೊಡಿಸಲು ಆಗುತ್ತಿಲ್ಲ ಎಂದು ಹರಿಹಾಯ್ದರು.