ಚಿಕ್ಕೋಡಿ: ಮಳೆಗಾಲ ಪ್ರಾರಂಭಕ್ಕೂ ಮುಂಚೆ ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣಾ ತಂಡ ರಚಿಸಿ, ಅತಿವೃಷ್ಠಿ ಮುನ್ನೆಚ್ಚರಿಕೆ ಕ್ರಮವಾಗಿ ಕಡ್ಡಾಯವಾಗಿ ವಿಪತ್ತು ನಿರ್ವಹಣಾ ತಂಡ ರಚನೆ ಮಾಡಬೇಕೆಂದು ಚಿಕ್ಕೋಡಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಶುಕ್ರವಾರ ನಡೆದ ವಿವಿಧ ಯೋಜನೆಯ ಪ್ರಗತಿ ಪರಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲದಲ್ಲಿ ಎದುರಾಗುವ ಸಮಸ್ಯೆ ನಿರ್ವಹಣೆಗೆ ಸೂಕ್ತ ಸಿದ್ದತೆ ಮಾಡಿಕೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಜನರ ರಕ್ಷಣೆ, ವಸತಿ ವ್ಯವಸ್ಥೆ ಊಟೋಪಹಾರಕ್ಕಾಗಿ ಕಾಳಜಿ ಕೇಂದ್ರ ಸ್ಥಾಪಿಸಬೇಕಾಗುತ್ತದೆ. ನದಿ ತೀರದ ಗ್ರಾಮ ಪಂಚಾಯಿತಿಗಳು ಸೂಕ್ತ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.
ಸಹಾಯಕ ನಿರ್ದೇಶಕ (ಗ್ರಾಉ) ಶಿವಾನಂದ ಶಿರಗಾಂವಿ ಮಾತನಾಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೂಲಿ ಕೆಲಸ ಬೇಡಿಕೆ ಸಲ್ಲಿಸಿದವರಿಗೆ ಕಡ್ಡಾಯವಾಗಿ ಕೆಲಸ ನೀಡಬೇಕು. ನಿರಾಕರಿಸಿದರೆ ಅವರ ಮೇಲೆ ಕ್ರಮ ಕೈಗೊಳಲಾಗುವುದು ಎಂದು ಹೇಳಿದರು.