ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರ ಹಾಗೂ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಬೇಕಿರುವ ಉಪ ಚುನಾ ವಣೆಗಳಿಗೆ ಬಿಜೆಪಿ-ಜೆಡಿಎಸ್ ಹಾಗೂ ಕಾಂಗ್ರೆಸ್ ತಾಲೀಮು ಆರಂಭಿಸಿವೆ.
ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಗಾಗಿ ಉಸ್ತುವಾರಿ ಸಮಿತಿಗಳನ್ನು ರಚಿಸಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, ಮಿತ್ರಪಕ್ಷಗಳಾದ ಬಿಜೆಪಿ-ಜೆಡಿಎಸ್ ಇನ್ನಷ್ಟೇ ತಾಲೀಮು ಆರಂಭಿಸಬೇಕಿದೆ.
2 ದಿನಗಳಲ್ಲಿ ಹೊಸದಿಲ್ಲಿಗೆ ತೆರಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದರೆ, ರಾಜ್ಯ ಸಂಸದರ ಸಭೆಯ ನೆಪದಲ್ಲಿ ದಿಲ್ಲಿಗೆ ಹೊರಟಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಉಪ ಚುನಾವಣೆ ವಿಚಾರವನ್ನು ಹೈಕಮಾಂಡ್ ಜತೆ ಚರ್ಚಿಸುವ ಸಾಧ್ಯತೆಗಳಿವೆ.ಮಂಗಳವಾರ ಅಥವಾ ಬುಧವಾರ ಹೊಸದಿಲ್ಲಿಯತ್ತ ಪ್ರಯಾಣ ಬೆಳೆಸಲಿರುವ ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತಿತರ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಅವಕಾಶ ಸಿಕ್ಕಿದರೆ ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಿ ಉಪ ಚುನಾವಣೆ ಕುರಿತು ಪ್ರಸ್ತಾವಿಸಬಹುದು ಎನ್ನಲಾಗಿದೆ.