ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ನನ್ನನ್ನು ಅಕ್ರಮವಾಗಿ ಸಿಲುಕಿಸುವ ಮೂಲಕ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರವು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಆರೋಪ ಮಾಡಿದ್ದಾರೆ.
ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಅವ್ಯವಹಾರದ ತನಿಖೆ ವೇಳೆ ED ಅಕ್ರಮ ಎಸಗಿಗುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಆರೋಪ ಮಾಡಿದ್ದಾರೆ.ಇಡಿ ಯು ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಬಿ. ಕಲ್ಲೇಶ್ ಅವರನ್ನು ತನಿಖೆಗೆ ಕರೆಸಿದೆ ಮತ್ತು ಮುಖ್ಯಮಂತ್ರಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಲಿಖಿತವಾಗಿ ನೀಡುವಂತೆ ಅವರ ಮೇಲೆ ಒತ್ತಡ ಹೇರಿದೆ ಎಂದು ಹೇಳಿದರು.