ಬೆಳಗಾವಿ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಧೃತಿಗೆಡದೆ, ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ನಿಶ್ಚಿತ ಗುರಿ, ದೃಢಸಂಕಲ್ಪ ಹಾಗೂ ಸತತ ಪ್ರಯತ್ನವಿದ್ದರೆ ಜಗತ್ತನ್ನೇ ಗೆಲ್ಲಬಹುದು’ ಎಂದು ಸಹಕಾರ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕ ಸುರೇಶಗೌಡ ಪಾಟೀಲ ಹೇಳಿದರು.
ಇಲ್ಲಿನ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಪ್ರಭುದೇವ ಸಭಾಗೃಹದಲ್ಲಿ ಆಯೋಜಿಸಿದ್ದ ಸಿದ್ಧರಾಮೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾನ್ನಿಧ್ಯ ವಹಿಸಿದ್ದ ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ, ‘ಇಂದು ವಿದ್ಯಾರ್ಥಿಗಳು ಆಟದ ಮೈದಾನಗಳ ಬದಲಿಗೆ, ಗ್ರಂಥಾಲಯದಲ್ಲಿ ಹೆಚ್ಚಿನ ಸಮಯ ಕಳೆಯಬೇಕು. ಸಾಮಾಜಿಕ ಜಾಲತಾಣ ತ್ಯಜಿಸಿ, ನಿರಂತರವಾಗಿ ಅಧ್ಯಯನದಲ್ಲಿ ತೊಡಗಿದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯ’ ಎಂದರು.