ಬೆಂಗಳೂರು, ಆಗಸ್ಟ್ 17: ಮುಡಾ ಹಗರಣದಲ್ಲಿ (muda) ಸಿಎಂ ಸಿದ್ದರಾಮಯ್ಯ(Siddaramaiah)ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರ ಸಿಎಂಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಸದ್ಯ ಈ ವಿಚಾರವಾಗಿ ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮಾಡಿದ್ದು, ರಾಜ್ಯಪಾಲರ ನಿರ್ಣಯವನ್ನ ಸಂಪುಟ ಸಭೆ ಖಂಡಿಸಿದೆ. ಬಳಿಕ ಮಾತನಾಡಿದ ಸಿದ್ದರಾಮಯ್ಯ, ನಾನು ಯಾವ ಕಾರಣಕ್ಕೆ ರಾಜೀನಾಮೆಯನ್ನ ನೀಡಬೇಕು? ಯಾವ ಆಧಾರದ ಮೇಲೆ ನೀಡಬೇಕು? ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆಯನ್ನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸಂಪುಟ ಸಭೆ ಬಳಿಕ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಂಟಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ನಿರ್ಧಾರಕ್ಕೆ ಕಾನೂನಿನ ಬಲ ಇಲ್ಲ. ಸಂವಿಧಾನದ ಪ್ರತಿನಿಧಿಗಳಾಗಿ ಅವರು ಕೆಲಸ ಮಾಡಬೇಕೇ ಹೊರತು ಬಿಜೆಪಿ ಪ್ರತಿನಿಧಿಯಾಗಿ ಕೆಲಸ ಮಾಡಬಾರದು. ನನ್ನ ಮೇಲೆ ಯಾಕೆ ರಾಜ್ಯಪಾಲರನ್ನ ಬಳಸಿಕೊಳ್ಳುತ್ತಿದ್ದಾರೆ? ರಾಜ್ಯಪಾಲರ ನಿರ್ಧಾರ ವಿರುದ್ಧ ನಾವು ಕೂಡ ಕಾನೂನು ಹೋರಾಟ ಮಾಡುತ್ತೇವೆ ಎಂದಿದ್ದಾರೆ.