ಚಿಕ್ಕಮಗಳೂರು: ಕೊರೊನಾ ಲೆಕ್ಕಿಸದೆ ಜನ ಮೋಜು ಮಸ್ತಿ ಮಾಡಲು ಮುಂದಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯ ಜನರಿಗೆ ಆತಂಕ ಎದುರಾಗಿದೆ.
ನೂರಾರು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳಿಂದ ಎಗ್ಗಿಲ್ಲದೆ ಪ್ರವಾಸಿಗರು ಕಾಫಿನಾಡಿನತ್ತ ಧಾವಿಸುತ್ತಿದ್ದು, ಜಿಲ್ಲೆಯ ಜನರಲ್ಲಿ ಭಯ ಶುರುವಾಗಿದೆ. ಉಡುಪಿ, ಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳ ಜೊತೆ, ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಚಾರ್ಮಾಡಿ, ಘಾಟಿಕಲ್, ದೇವರಮನೆ ಗುಡ್ಡ ಸೇರಿದಂತೆ ಜಿಲ್ಲೆಯ ವಿವಿಧ ತಾಣಗಳಿಗೆ ಪ್ರವಾಸಿಗರ ದಂಡು ಎಗ್ಗಿಲ್ಲದೆ ಬರುತ್ತಿದೆ. ಪ್ರವಾಸಿಗರನ್ನು ಕಂಡು ಕಾಫಿನಾಡಿನ ಜನ ಕಂಗಾಲಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 17 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇವುಗಳಲ್ಲಿ 16 ಮುಂಬೈ ನಂಟು ಹೊಂದಿವೆ. ಟ್ರಾವೆಲ್ ಹಿಸ್ಟರಿ ಇಲ್ಲದ ಒಂದು ಪ್ರಕರಣ ಮಾತ್ರ ಇದೆ. ಇದೀಗ ಎಗ್ಗಿಲ್ಲದೆ ಬರುತ್ತಿರುವ ಪ್ರವಾಸಿಗರಿಂದ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜನ ಭಯಗೊಂಡಿದ್ದಾರೆ. ಈಗಾಗಲೇ ಕಳೆದ ಮೂರು ದಿನಗಳಿಂದ ಕೇವಲ ಮುಳ್ಳಯ್ಯನಗರಿ, ಸೀತಾಳಯ್ಯನಗಿರಿ, ದತ್ತಪೀಠಕ್ಕೆ ಬಂದಿರುವ ಪ್ರವಾಸಿಗರ ಸಂಖ್ಯೆಯೇ ಐದಾರು ಸಾವಿರ ಇದೆ. ಇದಲ್ಲದೆ ಧಾರ್ಮಿಕ ಕ್ಷೇತ್ರ ಹಾಗೂ ಜಿಲ್ಲೆಯ ಇತರೆ ಪ್ರವಾಸಿ ತಾಣಗಳಿಗೂ ಸಾವಿರಾರು ಪ್ರವಾಸಿಗರು ಬಂದಿದ್ದಾರೆ.
ಕಳೆದ ಎರಡು ತಿಂಗಳಿಂದ ವ್ಯಾಪಾರ ವಹಿವಾಟು ಇಲ್ಲದೆ ಕಂಗಾಲಾಗಿರುವವರು ಪ್ರವಾಸಿಗರು ಬರಲಿ, ವ್ಯಾಪಾರವಾದರೂ ಆಗುತ್ತದೆ ಎನ್ನುತ್ತಿದ್ದಾರೆ. ಆದರೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿರ ಸಂಖ್ಯೆಯಿಂದ ಭಯ ಪಡುತ್ತಿದ್ದಾರೆ.