ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಮತ್ತು ಮಹಾನಗರ ಘಟಕಗಳ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ, ‘ಕಾಂಗ್ರೆಸ್ಸಿಗರು ಸ್ವತಃ ಕಳ್ಳತನ ಮಾಡಿ, ಈಗ ನಮ್ಮ ವಿರುದ್ಧ ಕಿರುಚಾಡುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿರುವ ರಾಜ್ಯಪಾಲ ಥಾವರಚಂದ ಗೆಹ್ಲೋತ್ ಅವರನ್ನು ಮನಬಂದಂತೆ ನಿಂದಿಸುತ್ತಿದ್ದಾರೆ. ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂಬ ಭಯ ಸಿದ್ದರಾಮಯ್ಯ ಅವರನ್ನು ಕಾಡುತ್ತಿದೆ. ಅವರು ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ’ ಎಂದು ಎಚ್ಚರಿಕೆ ಕೊಟ್ಟರು.