ಮಡಿಕೇರಿ: ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ವಾಹನವೊಂದರಲ್ಲಿ ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸೋಮಶೇಖರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಜೊತೆಗೆ ಬಷೀರ್ ಎಂಬಾತ ಮೈಸೂರು ಜಿಲ್ಲೆಯ ಕೆ.ಆರ್ ನಗರದಿಂದ ಅಕ್ರಮವಾಗಿ ಗೋಮಾಂಸ ತಂದು ಮಾರಾಟ ಮಾಡುತ್ತಿದ್ದನು.
ತರಕಾರಿ ಕೊಳ್ಳಲು ಹೋದ ಸಂದರ್ಭ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ ಗ್ರಾಮದವರಿಗೆ ತಿಳಿಸಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ಗ್ರಾಮಸ್ಥರು ವಾಹನವನ್ನು ಪರಿಶೀಲಿಸಿದಾಗ ವಾಹನದಲ್ಲಿ ಹತ್ತಾರು ಕೆ.ಜಿ ಗೋಮಾಂಸ ಇರುವುದು ಪತ್ತೆಯಾಗಿದೆ. ಕೂಡಲೇ ಶ್ರೀಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಗೋಮಾಂಸವನ್ನು ತಂದು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳ ವಿರುದ್ಧ ಗಲಾಟೆ ಮಾಡಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲವು ಸಮಯ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಅಷ್ಟೊತ್ತಿಗೆ ಸ್ಥಳಕ್ಕೆ ಬಂದ ಪೊಲೀಸರು ಗೋಮಾಂಸ ಮತ್ತು ಮಾಂಸ ಮಾರಾಟ ಮಾಡಲು ಬಳಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ ಗೋಮಾಂಸ ಮಾರಾಟ ಮಾಡುತ್ತಿದ್ದ ಸೋಮಶೇಖರ್ ಎಂಬಾತನ್ನು ಬಂಧಿಸಿದ್ದಾರೆ. ಆದರೆ ಮತ್ತೊಬ್ಬ ಆರೋಪಿ ಬಷೀರ್ ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಅಲ್ಲಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ. ಘಟನೆ ಸಂಬಂಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.