ಬೆಳಗಾವಿ: ‘ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಆರಂಭಿಸಲು ನಡೆಸಿದ ಪ್ರಯತ್ನ ಈಗ ಸಾಕಾರಗೊಂಡಿದೆ. ಹುಬ್ಬಳ್ಳಿವರೆಗೆ ಸೇವೆ ವಿಸ್ತರಣೆಗೊಂಡಿದ್ದು, ಸೆ.15ರಂದು ಪ್ರಧಾನಿ ನರೇಂದ್ರ ಮೋದಿ ರೈಲಿಗೆ ಚಾಲನೆ ನೀಡಲಿದ್ದಾರೆ’ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವು ತಿಂಗಳ ಹಿಂದೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿಯಾಗಿ, ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಆರಂಭಿಸಬೇಕು. ಬೆಂಗಳೂರು-ಧಾರವಾಡ ವಂದೇ ಭಾರತ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದೆ. ಈಗ ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ರೈಲು ಸೇವೆ ಆರಂಭವಾಗಿದೆ. ಅಂದು ಬೆಳಗಾವಿ ನಿಲ್ದಾಣದಲ್ಲೂ ಕಾರ್ಯಕ್ರಮ ಆಯೋಜಿಸಿ, ರೈಲು ಸ್ವಾಗತಿಸಲಾಗುವುದು’ ಎಂದರು.