ಬೆಳಗಾವಿ: ಸರ್ಕಾರಿ ಮಾರ್ಗಸೂಚಿ ಪ್ರಕಾರ, 100 ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ, ಸಫಾಯಿ ಕರ್ಮಚಾರಿ ಕಾವಲು ಸಮಿತಿ-ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಪೌರ ಕಾರ್ಮಿಕರು ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಪೌರ ಕಾರ್ಮಿಕರ ದಿನಾಚರಣೆ ಬಹಿಷ್ಕರಿಸಿದ ಅವರು, ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
‘ಸರ್ಕಾರ ಪೌರ ಕಾರ್ಮಿಕರ ದಿನವನ್ನು ಅದ್ದೂರಿಯಾಗಿ ಆಚರಿಸಿದರೆ ಸಾಲದು. ಪೌರ ಕಾರ್ಮಿಕರ ಸಮಸ್ಯೆಗಳನ್ನೂ ಬಗೆಹರಿಸಬೇಕು’ ಎಂದು ಒತ್ತಾಯಿಸಿದರು.
‘ಆನಂದವಾಡಿಯ ರಮಾಬಾಯಿ ಅಂಬೇಡ್ಕರ್ ಹಾಲ್ನಲ್ಲಿ ವ್ಯಾಯಾಮ ಶಾಲೆ, ಗ್ರಂಥಾಲಯ ನಿರ್ಮಾಣಕ್ಕಾಗಿ 2023-24ನೇ ಸಾಲಿನ ಕ್ರಿಯಾ ಯೋಜನೆಯಡಿ ₹38 ಲಕ್ಷ ಅನುದಾನ ಮೀಸಲಿಟ್ಟ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಬೇಕು. 154 ಕಾಯಂ ಪೌರ ಕಾರ್ಮಿಕರ ಬಾಕಿ ವೇತನ ಪಾವತಿಸಬೇಕು’ ಎಂದು ಆಗ್ರಹಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ್ ವಾಘೇಲಾ, ‘ಬೆಳಗಾವಿ ಪಾಲಿಕೆಯಲ್ಲಿ ಈಗ 1,350 ಪೌರ ಕಾರ್ಮಿಕರು ದುಡಿಯುತ್ತಿದ್ದೇವೆ. ಈ ಪೈಕಿ 540 ಕಾಯಂ ಪೌರ ಕಾರ್ಮಿಕರಿದ್ದೇವೆ. ಉಳಿದವರ ಸೇವೆಯನ್ನು ಹಂತ ಹಂತವಾಗಿ ಸರ್ಕಾರ ಕಾಯಂಗೊಳಿಸಬೇಕು. ಹುಬ್ಬಳ್ಳಿ-ಧಾರವಾಡ, ಬೆಂಗಳೂರು, ಮೈಸೂರು ಪಾಲಿಕೆಗಳ ಮಾದರಿಯಲ್ಲಿ ಇಲ್ಲಿಯೂ ಪೌರ ಕಾರ್ಮಿಕರಿಗೆ ಬೆಳಗಿನ ಉಪಾಹಾರ ನೀಡಬೇಕು’ ಎಂದು ಒತ್ತಾಯಿಸಿದರು.
‘ಇಂದು ಪಾಲಿಕೆ ಆಯುಕ್ತರು ನಮ್ಮ ಬೇಡಿಕೆ ಆಲಿಸಿಲ್ಲ. ಹಾಗಾಗಿ ಮಂಗಳವಾರವೂ ಪ್ರತಿಭಟನೆ ಮಾಡುತ್ತೇವೆ’ ಎಂದರು.
ಮುಖಂಡರಾದ ವಿಜಯ ನೀರಗಟ್ಟಿ, ಮುನಿಸ್ವಾಮಿ ಭಂಡಾರಿ, ಷಣ್ಮುಖ ಆದಿಯಂದ್ರ ಇತರರಿದ್ದರು.
ಆಸೀಫ್ ಸೇಠ್ ಶಾಸಕಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವ ಸಂಬಂಧ ಚರ್ಚೆ ನಡೆದಿದೆ. ಮುಂದಿನ ದಿನಗಳಲ್ಲಿ ಅವರಿಗೆ ನ್ಯಾಯ ಕೊಡಿಸಲಾಗುವುದು