Breaking News

ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಏನಂದ್ರು?

Spread the love

ಬೆಳಗಾವಿ, ಸೆಪ್ಟೆಂಬರ್‌ 28: ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

 

6 ಸಾವಿರ ಕೋಟಿ ಮೊತ್ತದ ಎಲೆಕ್ಟ್ರೋ ಬಾಂಡ್ ಹಗರಣದಲ್ಲಿ ಸಿಲುಕಿರುವ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿನೋಟಿಫೈ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲು ರಾಜೀನಾಮೆ ನೀಡಲಿ, ನಂತರ ಸಿಎಂ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ಸಚಿವರು ಕಿಡಿಕಾರಿದರು.

ರಾಜಕೀಯ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಾವೂ ಕೂಡ ರಾಜಕೀಯ ಮಾಡುತ್ತಿದ್ದು, ಕಿವಿ ಮೇಲೆ ಹೂ ಇಟ್ಟುಕೊಂಡಿಲ್ಲ. ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದು ಹೇಳಿದರು.

ಚುನಾವಣೆಗೂ ಮೊದಲು ನಾವು ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಗಿಮಿಕ್ ಎಂದು ಛೇಡಿಸಿದ್ದರು. ನಾವು ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದೆವು. ಇದನ್ನು ಸಹಿಸದ ವಿಪಕ್ಷಗಳು ಇದೀಗ ಯೋಜನೆಗಳ ಬಗ್ಗೆ, ಸರ್ಕಾರದ ಬಗ್ಗೆ ವಿನಾಕಾರಣ ಆರೋಪಗಳನ್ನು ಮಾಡುತ್ತಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

136 ಜನ ಕಾಂಗ್ರೆಸ್ ಶಾಸಕರಿದ್ದು, ಸರ್ಕಾರಕ್ಕೆ ಆಪತ್ತಿಲ್ಲ. ಸಿದ್ದರಾಮಯ್ಯನವರಂಥ ಧೀಮಂತ ನಾಯಕನ ನಾಯಕತ್ವ ನಮ್ಮ ಪಕ್ಷಕ್ಕಿದ್ದು, ಅವರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನದ್ದಾಗಿರುತ್ತದೆ. ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿಗರು ಹಗಲುಗನಸು ಕಾಣುತ್ತಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ನಾಯಕರು ಟೀಕಿಸುತ್ತಾರೆ. ಆದರೆ, ಜಮ್ಮು ಕಾಶ್ಮೀರ, ಹರಿಯಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನಮ್ಮ ಯೋಜನೆಗಳನ್ನೇ ಅನುಕರಣೆ ಮಾಡಿದ್ದಾರೆ. ಇದು ಅವರಿಗಿರುವ ದ್ವಂದ್ವ ನಿಲುವು. ನಮ್ಮ ಯೋಜನೆಗಳು ಕೇವಲ ಕರ್ನಾಟಕಕ್ಕಷ್ಟೆ ಅಲ್ಲ, ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಿಜೆಪಿಯವರಿಗೆ ಚುನಾವಣೆ ಗೆಲ್ಲುವುದಷ್ಟೇ ಕೆಲಸವಾಗಿದೆ. ನಮಗೆ ಅತಿವೃಷ್ಠಿ, ಅನಾವೃಷ್ಟಿ ಆದಾಗ ಹಣ ಕೊಡದ ಕೇಂದ್ರ ಸರ್ಕಾರ, ನಮ್ಮ ಪಾಲಿಗೆ ಜಿಎಸ್‌ಟಿ ಮೊತ್ತವನ್ನು ಕೊಡಲಿಲ್ಲ. ಕೇವಲ ರಾಜಕೀಯ ಪ್ರೇರಿತವಾಗಿ ಕರ್ನಾಟಕವನ್ನು ನೋಡುತ್ತಿದೆ ಎಂದು ಸಚಿವರು ಆರೋಪಿಸಿದರು. ಬೇರೆ ರಾಜ್ಯಗಳ ಚುನಾವಣಾ ಪ್ರಚಾರದ ವೇಳೆ ಮೋದಿ ಮುಡಾ ಹಗರಣ ಪ್ರಸ್ತಾಪಿಸುವ ಮೂಲಕ ಕರ್ನಾಟಕ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಕರ್ನಾಟಕದ ಹೆಸರು ಕೆಡಿಸಿ ಚುನಾವಣೆಯಲ್ಲಿ ಗೆಲ್ಲುವುದೇ ಮುಖ್ಯವಾಗಿದೆ ಎಂದರು.

ಪಂಚಮಸಾಲಿ ಸಮುದಾಯಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಕೊಡುಗೆ ಏನು ಎಂದು ಸಚಿವರು ಪ್ರಶ್ನಿಸಿದರು. ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರ, 2A ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲ ಇರುತ್ತದೆ ಎಂದರು.

ಮುರುಗೇಶ್ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮ್ಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಸೈಬರ್‌ ಅಪರಾಧ ತಡೆಗೆ ಯುವಕರ ತಂಡ; ಜನರಿಗೂ ಡಿಜಿಟಲ್ ಸಾಕ್ಷರತೆ

Spread the love ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಜಿಲ್ಲೆಯಲ್ಲಿ ಸೈಬರ್‌ ಅಪರಾಧಗಳನ್ನು ತಡೆಯಲು ಹಾಗೂ ಜನರನ್ನು ಜಾಗೃತಗೊಳಿಸಲು ಯುವಕರ ತಂಡವೊಂದು ನಾಲ್ಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ