ಉಡುಪಿ: ಚುನಾವಣೆಗೆ ಮೊದಲು ನನಗೆ ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ. ಮೈಸೂರು ರಾಜ ವಂಶಸ್ಥರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ನನಗೆ ತಿಳಿದಿರಲಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ನಾನು ಹಿಂದುಳಿದ ವರ್ಗಗಳ ಅಭ್ಯರ್ಥಿ ಎಂಬ ವಿಚಾರದಿಂದ ನನ್ನ ಜಾತಿ ಗೊತ್ತಾಯಿತು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರವಿವಾರ (ಸೆ.29) ಕುಂಜಿಬೆಟ್ಟು ಶಾರದ ಕಲ್ಯಾಣ ಮಂಟಪದಲ್ಲಿ ಕರಾವಳಿಯ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ರಾಜವಂಶಸ್ಥರು ಹಿಂದುಳಿದ ವರ್ಗದವರು ಎಂದು ಹೇಳಿದರೆ ಎಲ್ಲರೂ ನಗುತ್ತಾರೆ. ಅದಕ್ಕಾಗಿ ನನಗೆ ಜಾತಿ ಲೆಕ್ಕದಲ್ಲಿ ಅಲ್ಲ, ಎಲ್ಲ ಸಮುದಾಯವನ್ನು ಪ್ರತಿನಿಧಿಸುವ ಸೌಭಾಗ್ಯ ಸಿಕ್ಕಿರುವುದು ಸಂತೋಷ ತಂದಿದೆ. ನಮ್ಮ ದೇಶದಲ್ಲಿ ಒಂದು ರೀತಿಯಲ್ಲಿ ಜಾತಿ ವ್ಯವಸ್ಥೆ ಇರುವುದು ಒಳ್ಳೆಯದಾಗಿದೆ. ಈ ಮೂಲಕ ಭಾರತೀಯ ವೈವಿಧ್ಯತೆಯನ್ನು ಸಂರಕ್ಷಣೆ ಮಾಡಬಹುದಾಗಿದೆ. ಆದರೆ ಇನ್ನೊಂದು ಅರ್ಥದಲ್ಲಿ ಜಾತಿ ಶಾಪವು ಕೂಡ ಆಗಿದೆ. ಇದನ್ನು ಬೇರೆಬೇರೆ ಕಾರಣಗಳಿಂದ ದುರಪಯೋಗಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಾತಿಯನ್ನು ಸರಿಯಾದ ದಾರಿಯಲ್ಲಿ ತೆಗೆದುಕೊಂಡು ಹೋಗಬೇಕಾಗಿರುವುದು ಬಹಳ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.