ಬೆಂಗಳೂರು: ಪರಿಚಿತ ಮಹಿಳೆ ಕರೆದಳೆಂದು ಮನೆಗೆ ಹೋದ ವ್ಯಕ್ತಿಯನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 57 ವರ್ಷದ ಸಿವಿಲ್ ಕಾಂಟ್ರಾಕ್ಟರ್ ಒಬ್ಬರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂತೋಷ್, ಅಜಯ್ ಹಾಗೂ ಜಯರಾಜ್ ಎಂಬಾತನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ನಯನಾ ಎಂಬಾಕೆಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ದೂರುದಾರ ವ್ಯಕ್ತಿಗೆ 5 – 6 ತಿಂಗಳುಗಳ ಹಿಂದಷ್ಟೆ ಪರಿಚಯವಾಗಿದ್ದ ನಯನಾ ಆಗಾಗ ತನ್ನ ಮಗುವಿಗೆ ಹುಷಾರಿಲ್ಲವೆಂದು 4 – 5 ಸಾವಿರ ರೂ. ಹಣ ಪಡೆದುಕೊಳ್ಳುತ್ತಿದ್ದಳು. ಆಗಾಗ ಮನೆಗೆ ಬನ್ನಿ ಎಂದು ನಯನಾ ಕರೆಯುತ್ತಿದ್ದಳಾದರೂ ದೂರುದಾರ ವ್ಯಕ್ತಿ ಹೋಗಿರಲಿಲ್ಲ. ಡಿಸೆಂಬರ್ 9 ರಂದು ಮಾಗಡಿ ರಸ್ತೆಯ ತುಂಗಾನಗರ ಕ್ರಾಸ್ ಬಳಿ ದೂರುದಾರನಿಗೆ ಎದುರಾಗಿದ್ದ ನಯನಾ, “ನಮ್ಮ ಮನೆ ಸಮೀಪದಲ್ಲಿಯೇ ಇದೆ, ಟೀ ಕುಡಿದು ಹೋಗುವಿರಂತೆ ಬನ್ನಿ” ಎಂದು ಆಹ್ವಾನಿಸಿದ್ದಳು.
ಅದರಂತೆ ದೂರುದಾರ ಆಕೆಯ ಮನೆಗೆ ಹೋಗಿದ್ದರು. ಮನೆಯಲ್ಲಿ ಮಾತನಾಡುತ್ತಾ ಕುಳಿತಿದ್ದಾಗ ಏಕಾಏಕಿ ಬಂದ ಉಳಿದ ಮೂವರು ಆರೋಪಿಗಳು, “ನಾವು ಕ್ರೈಮ್ ಪೊಲೀಸ್ ಸಿಬ್ಬಂದಿ, ನೀವು ವ್ಯಭಿಚಾರದಲ್ಲಿ ತೊಡಗಿದ್ದೀರಾ” ಎನ್ನುತ್ತಾ ಬೆದರಿಸಿ ದೂರುದಾರನ ಬಟ್ಟೆ ಬಿಚ್ಚಿಸಿ ವಿಡಿಯೋ ಚಿತ್ರೀಕರಿಸಿಕೊಂಡಿದ್ದರು. ಬಳಿಕ “ಎರಡು ಲಕ್ಷ ಕೊಡದಿದ್ದರೆ, ನಿಮ್ಮಿಬ್ಬರ ಅಕ್ರಮ ಸಂಬಂಧದ ಕುರಿತು ನಿನ್ನ ಪತ್ನಿಗೆ ಹೇಳುತ್ತೇವೆ” ಎಂದು ಬೆದರಿಸಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
Laxmi News 24×7