ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರು ಜೈಲು ಸೇರಿದ್ದರು. ಕೆಲವು ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದ ಅವರಿಗೆ ಇತ್ತೀಚೆಗೆ ಹೈಕೋರ್ಟ್ ಜಾಮೀನು ನೀಡಿತ್ತು. ದರ್ಶನ್ಗೆ ಬೆನ್ನು ನೋವು ಕಾಡುತ್ತಿದೆ. ಹೆಚ್ಚಿನ ಚಿಕಿತ್ಸೆ ಬಗ್ಗೆ ಅವರು ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ಈ ನಡುವೆ ದರ್ಶನ್ ಅವರಿಗೆ ಹೊಸ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ದರ್ಶನ್ಗೆ ನೀಡಿರುವ ಬೇಲ್ ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ಪೊಲೀಸರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುಂದಿನ ವಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಇದರಿಂದಾಗಿ ದರ್ಶನ್ ಮತ್ತು ಅವರ ಸಹಚರರಿಗೆ ಟೆನ್ಷನ್ ಶುರುವಾಗಿದೆ.
ಪರಪ್ಪನ ಅಗ್ರಹಾರದಲ್ಲಿ ಜೈಲಿನ ನಿಯಮಗಳನ್ನು ಗಾಳಿಗೆ ತೂರಿದ್ದು ಬಹಿರಂಗ ಆದ ಬಳಿಕ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಕಳಿಸಲಾಗಿತ್ತು. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾಗ ದರ್ಶನ್ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು. ನಡೆದಾಡಲು ಕೂಡ ಅವರು ಕಷ್ಟಪಡುತ್ತಿದ್ದರು. ಕೂಡಲೇ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ಸೂಚನೆ ನೀಡಿದ್ದರು. ಆ ವರದಿಯನ್ನು ಪರಿಗಣಿಸಿ ಮಧ್ಯಂತರ ಜಾಮೀನು ನೀಡಲಾಯಿತು. ಮಧ್ಯಂತರ ಜಾಮೀನು ಅವಧಿ ಮುಗಿಯುತ್ತಿದ್ದಂತೆಯೇ ದರ್ಶನ್ಗೆ ರೆಗ್ಯುಲರ್ ಬೇಲ್ ಸಿಕ್ಕಿತ್ತು.
Laxmi News 24×7