ಹುಬ್ಬಳ್ಳಿ: “ಬೆಳಗಾವಿಯಲ್ಲಿ ನಡೆಸುತ್ತಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ಬಿಜೆಪಿಯು ಕಾಂಗ್ರೆಸ್ ನಾಯಕರನ್ನು ಹೆದರಿಸುತ್ತಿದೆ” ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮುಡಾ ಹಗರಣದಲ್ಲಿ 300 ಕೋಟಿ ಆಸ್ತಿ ಜಪ್ತಿ ಮಾಡಿರುವುದಾಗಿ ಇ.ಡಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಮೂಲಕ ಬಿಜೆಪಿ ದ್ವೇಷ ಹಾಗೂ ಹಿಂಸೆಯ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ನ ಪ್ರಭಾವಿ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಈಗ ಸಿದ್ದರಾಮಯ್ಯನವರ ವಿರುದ್ಧ ಇ.ಡಿ ಅಸ್ತ್ರ ಪ್ರಯೋಗಿಸಿದೆ” ಎಂದು ದೂರಿದರು.
“ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ಗೆ ಅವಮಾನ ಮಾಡಿದನ್ನು ಮರೆಮಾಚಲು ಈ ರೀತಿ ಆರೋಪ ಮಾಡಲು ಮುಂದಾಗಿದ್ದಾರೆ. ನಾಥೂರಾಮ್ ಗೋಡ್ಸೆ ವಿಚಾರಧಾರೆ ಹೊಂದಿರುವ ಬಿಜೆಪಿಯವರು, ಗಾಂಧಿ ತತ್ವವನ್ನು ಒಪ್ಪಲು ಸಾಧ್ಯವಿಲ್ಲ. ಬಿಜೆಪಿ ಯಾವತ್ತಿಗೂ ಸಂವಿಧಾನವನ್ನು ವಿರೋಧಿಸುತ್ತ ಬಂದಿದೆ. ಬಿಜೆಪಿ ಸಾಮಾಜಿಕ ನ್ಯಾಯದ ವಿರುದ್ಧ ಕೆಲಸ ಮಾಡುತ್ತದೆ” ಎಂದು ವಾಗ್ದಾಳಿ ನಡೆಸಿದರು.
“ದೆಹಲಿಯಲ್ಲಿ ಕಾಂಗ್ರೆಸ್ ತನ್ನ ಸ್ವಂತ ಶಕ್ತಿಯ ಮೇಲೆ ಚುನಾವಣೆಗೆ ಸ್ಪರ್ಧಿಸಲಿದೆ. ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಆ ಕಾರಣಕ್ಕೆ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸಿದೆ” ಎಂದು ಹೇಳಿದರು.
Laxmi News 24×7