ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲು ಕಾರ್ಯಕ್ರಮ ರೂಪಿಸಿದೆ. ಹೆಣ್ಣುಮಕ್ಕಳ ಲಿಂಗಾನುಪಾತ ಹೆಚ್ವಿಸುವುದರ ಜೊತೆಗೆ ಹೆಣ್ಣುಭ್ರೂಣ ಹತ್ಯೆ ಹೋಗಲಾಡಿಸಲು ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ.
ಈ ಬಾರಿಯ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ರಾಜ್ಯದ ಎಲ್ಲ ಸರಕಾರಿ ಜಿಲ್ಲಾಸ್ಪತ್ರೆಗಳಲ್ಲಿ ಸಂಭ್ರಮದಿಂದ ಆಚರಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಆಸ್ಪತ್ರೆಗಳನ್ನು ಪಿಂಕ್ ಲೈಟಿಂಗ್ನಿಂದ ಸಿಂಗರಿಸಲು ತಿಳಿಸಲಾಗಿದೆ. ಅಲ್ಲದೇ ಇಂದು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಮಕ್ಕಳಿಗೆ ಸ್ಪೆಷಲ್ ಗಿಫ್ಟ್ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. 1000 ರೂ. ಬೆಲೆಯ ಮಕ್ಕಳ ಕಿಟ್ಸ್ಗಳನ್ನು ಜನಿಸಿದ ಹೆಣ್ಣು ಮಗುವಿಗೆ ಸರಕಾರದಿಂದ ಉಚಿತ ಉಡುಗೊರೆಯಾಗಿ ನೀಡಲು ಜಿಲ್ಲೆಗಳ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ.
ಹೆಣ್ಣುಮಕ್ಕಳ ದಿನಕ್ಕೆ ಶುಭ ಕೋರಿದ ಸಚಿವ ಗುಂಡೂರಾವ್: ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಗೆ ಶುಭಕೋರಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಬದ್ಧ ಎಂದಿದ್ದಾರೆ. ಹೆಣ್ಣುಮಕ್ಕಳ ಆರೋಗ್ಯ ಕಾಪಾಡುವ ವಿಚಾರದಲ್ಲಿ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆ ಹೆಣ್ಣುಮಕ್ಕಳ ರಕ್ತ ಹೀನತೆ ಹೋಗಲಾಡಿಸುವಲ್ಲಿ ಮಹತ್ವದ ಯೋಜನೆಯಾಗಿದೆ. ಶುಚಿ ಯೋಜನೆ, ಜನನಿ ಸುರಕ್ಷಾ ಯೋಜನೆಗಳನ್ನು ಜಾರಿಗೊಳಿಸದೆ. ವಿಶೇಷವಾಗಿ ಹೆಣ್ಣು ಭ್ರೂಣ ಹತ್ಯೆ ನಡೆಸುವವರ ವಿರುದ್ಧ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಜನರಲ್ಲಿ ಜಾಗೃತಿ ಮೂಡಿಸಲು ಈ ದಿನದ ಆಚರಣೆ: ಸಮಾಜದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಎಲ್ಲಾ ಅಸಮಾನತೆಗಳ ಬಗ್ಗೆ ದಿನಾಚರಣೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಹೆಣ್ಣು ಹುಟ್ಟುವ ಮೊದಲೇ ಎದುರಿಸುವ ಲಿಂಗ ತಾರತಮ್ಯವು ಒಂದು ಪ್ರಚಲಿತ ಸಮಸ್ಯೆಯಾಗಿದೆ. ಇಂದಿಗೂ ಸಹ ಹೆಚ್ಚಿನ ಜನರು ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳನ್ನು ಹೊಂದಬೇಕೆಂದು ನಂಬುತ್ತಾರೆ. ಇದು ಸರಿಯಲ್ಲ. ಹೆಣ್ಣನ್ನು ಪೂಜ್ಯ ಭಾವನೆಯಿಂದ ನೋಡಬೇಕು. ಲಿಂಗ ಪತ್ತೆ ಮತ್ತು ಗರ್ಭಪಾತ ನಡೆಸುವ ಎಲ್ಲಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮತ್ತು ಹೆಣ್ಣು ಮಗುವಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ PCPNDT ಕಾಯ್ದೆಯನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಮ್ಮ ಶುಭಾಶಯದಲ್ಲಿ ತಿಳಿಸಿದ್ದಾರೆ.
Laxmi News 24×7