ಬೆಂಗಳೂರು: ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಮತ್ತೆ ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ತಮ್ಮ ಮಗನ ಹೆಸರನ್ನು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ ನೋಂದಣಾಧಿಕಾರಿಗಳಿಗೆ ನಿರ್ದೇಶನ ನೀಡಲು ಕೋರಿ ಮಗುವಿನ ಪರವಾಗಿ ಅವರ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಎಸ್.ಸಂಜಯ್ಗೌಡ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ.
ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ಹೆಸರನ್ನು ನೋಂದಾಯಿಸಿದ ಬಳಿಕ ಅದನ್ನು ಪೋಷಕರು ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳುವುದು ಮತ್ತು ಹಲವು ಹೆಸರುಗಳನ್ನು ಇಡುವುದು ನಮ್ಮ ದೇಶದಲ್ಲಿ ಸಾಮಾನ್ಯವಾಗಿದೆ. ಆದರೆ, ದಾಖಲೆಗಳು ಒಂದೇ ಹೆಸರನ್ನು ನಮೂದಿಸಿವುದಕ್ಕೆ ಅವಕಾಶವಿರುವುದರಿಂದ ಇದು ವ್ಯಕ್ತಿಯನ್ನು ಗುರುತಿಸುವುದಕ್ಕೆ ಕೆಲವು ಸಂದರ್ಭಗಳಲ್ಲಿ ಗೊಂದಲಗಳನ್ನುಂಟು ಮಾಡಲಿದೆ. ಈ ಸಂಬಂಧ ಶಾಸನಸಭೆ ಗಮನ ಹರಿಸಿ ನಾಗರಿಕರು ತಾವು ಬಯಸಿದ ಸಂದರ್ಭದಲ್ಲಿ ತಮ್ಮ ಹೆಸರುಗಳನ್ನು ಬದಲಾವಣೆಗೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳವ ರೀತಿಯಲ್ಲಿ ತಿದ್ದುಪಡಿ ಮಾಡಬೇಕು. ಜೊತಗೆ, ಹೆಸರು ಬದಲಾಯಿಸಿಕೊಳ್ಳುವವರ ದಾಖಲೆಗಳನ್ನು ಏಕ ಕಾಲಕ್ಕೆ ಬದಲಾವಣೆಗೆ ಅವಕಾಶ ನೀಡುವಂತಹ ಕಾರ್ಯವಿಧಾನವನ್ನು ರೂಪಿಸಬೇಕು ಎಂದು ಪೀಠ ಆದೇಶಿಸಿದೆ.
ರಾಜ್ಯ ಕಾನೂನು ಆಯೋಗ 2013ರ ಜುಲೈ 20ರಂದು ಸರ್ಕಾರಕ್ಕೆ ಸಲ್ಲಿಸಿರುವ 24ನೇ ವರದಿಯಲ್ಲಿನ ಶಿಫಾರಸುಗಳನ್ನು ಪರಿಗಣಿಸಿ ಕಾಯಿದೆಗೆ ತಿದ್ದುಪಡಿ ಮಾಡುವುದು ಸೂಕ್ತ ಎಂದು ನ್ಯಾಯಪೀಠ ತನ್ನ ಆದೇಶಲ್ಲಿ ತಿಳಿಸಿದೆ. ಅಲ್ಲದೇ, ಕಾಯಿದೆಯ ಪ್ರಕಾರ ಹೆಸರನ್ನು ತಿದ್ದುಪಡಿ ಮಾಡುವವರೆಗೂ ಪೋಷಕರು ತಮ್ಮ ಮಕ್ಕಳ ಹೆಸರನ್ನು ಬದಲಾಯಿಸುವಂತೆ ಕೋರಿ ಅರ್ಜಿ ಸಲ್ಲಿಸಿದಲ್ಲಿ ಪರಿಗಣಿಸುವುದಕ್ಕೆ ಸಾಧ್ಯವಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಅಲ್ಲದೆ, ಹೆಸರು ಬದಲಾವಣೆ ಕೋರಿ ಬರುವವರ ಕುರಿತಂತೆ ಕೈಗೊಳ್ಳಬೇಕಾದಂತಹ ಕ್ರಮಗಳ ಕುರಿತು ನ್ಯಾಯಪೀಠ ಅಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ. ಕಾಯಿದೆ ತಿದ್ದುಪಡಿಯಾಗುವವರೆಗೂ ಈ ನಿರ್ದೇಶನಗಳನ್ನು ಅನುಸರಿಸುವ ಮೂಲಕ ಹೆಸರನ್ನು ಬದಲಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಪೀಠ ಹೇಳಿದೆ.
Laxmi News 24×7