ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿ 37 ಲಕ್ಷ ಮಕ್ಕಳ ಲಾಲನೆ – ಪಾಲನೆ ಮತ್ತು 15 ಲಕ್ಷ ಬಾಣಂತಿಯರ ಆರೈಕೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಹಿಳಾ ಸಾಧಕಿಯರು ಮತ್ತು ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಸರ್ಕಾರವು ದುರ್ಬಲ ಮಹಿಳೆಯರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನವನ್ನು ಬಜೆಟ್ನಲ್ಲಿ ಹೆಚ್ಚಳ ಮಾಡಲಾಗಿದ್ದು, ಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಿಸುವ ಆಶಯ ಹೊಂದಲಾಗಿದೆ ಎಂದರು.ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಇಂದು ತಮ್ಮ ಛಾಪು ಮೂಡಿಸುತ್ತಿದ್ದಾರೆ. ಪ್ರತಿಯೊಬ್ಬ ಹೆಣ್ಣು ಮಗಳ ಜೀವನದ ಹಿಂದೆ ತನ್ನದೇ ಆದ ಕಥೆಗಳಿವೆ. ತಳಮಟ್ಟದಿಂದ ಮೇಲೆ ಬಂದು ಸಮಾಜದ ಎಲ್ಲ ಸ್ತರಗಳಲ್ಲಿ ಮಹಿಳೆಯರು ಬೆಳೆದಿದ್ದಾರೆ. ಗುರಿ ಇಲ್ಲದ ಜೀವನ ಮಹಿಳೆಗೆ ಸಾಧುವಲ್ಲ. ಗುರಿ ಮುಂದಿಟ್ಟುಕೊಂಡೆ ಮುಂದೆ ಸಾಗಬೇಕು ಎಂದು ಕರೆ ನೀಡಿದರು.
Laxmi News 24×7