ಮಂಡ್ಯ, ಮಾರ್ಚ್ 16: ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಅನಾಥಾಶ್ರಮದಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನಿಂಗ್ (Food Poisoning) ಆಗಿದೆ. ವಿಷ ಪ್ರಾಶನದ ಪರಿಣಾಮ 6ನೇ ತರಗತಿಯ ವಿದ್ಯಾರ್ಥಿ ಕೆರ್ಲಾಂಗ್ (13) ಸಾವನ್ನಪ್ಪಿದ್ದು, 29 ಮಕ್ಕಳು ಅಸ್ವಸ್ಥರಾಗಿದ್ದಾರೆ. ಉದ್ಯಮಿಯೊಬ್ಬರು ಶುಕ್ರವಾರ ಹೋಳಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಊಟ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭ ಉಳಿದ ಊಟವನ್ನು ಟಿ.ಕಾಗೇಪುರ ಗ್ರಾಮದ ಬಳಿ ಇರುವ ಅನಾಥಾಶ್ರಮಕ್ಕೆ ನೀಡಲಾಗಿತ್ತು. ಅನಾಥಾಶ್ರಮದ ಮಕ್ಕಳು ಈ ಊಟ ಸೇವಿಸಿದ ಬಳಿಕ ಅವರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತು. ತಕ್ಷಣವೇ ಅವರನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಈ ಅನಾಹುತದ ಬಳಿಕ ಹೋಳಿ ಹಬ್ಬದ ಸಂದರ್ಭದಲ್ಲಿ ಊಟ ಸೇವಿಸಿದ್ದ ಕೆಲವು ಸಾರ್ವಜನಿಕರೂ ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಇದರಿಂದಾಗಿ ಊಟದಲ್ಲಿ ವಿಷಾಂಶ ಇತ್ತೇ ಎಂಬುದರ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಫುಡ್ ಪಾಯ್ಸನಿಂಗ್ ಕುರಿತು ಪ್ರಕರಣ ದಾಖಲಿಸಲಾಗಿದೆ. ಘಟನೆಯ ಪೂರ್ಣ ಮಾಹಿತಿ ಸಂಗ್ರಹಿಸಲು ಆರೋಗ್ಯ ಇಲಾಖೆ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Laxmi News 24×7