ಉಡುಪಿ: ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಮರಕ್ಕೆ ಕಟ್ಟಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ.
ಮೀನುಗಾರಿಕೆಗೆ ತೆರಳಿದ್ದ ಬೋಟ್ನಿಂದ ಬಂದರಿನಲ್ಲಿ ಮೀನು ಖಾಲಿ ಮಾಡುತ್ತಿದ್ದ ಸಂದರ್ಭ ಮಹಿಳೆ ದುಬಾರಿ ಬೆಲೆಯ ಸಿಗಡಿ ಮೀನನ್ನು ಕದ್ದಿದ್ದಾಳೆ ಎಂದು ಆರೋಪಿಸಲಾಗಿದೆ. ಮೀನು ಕದ್ದದ್ದನ್ನು ವಿಚಾರಣೆ ಮಾಡಿದಾಗ ಆಕೆ ಒಪ್ಪಿಕೊಂಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ. ಆ ಮಹಿಳೆ ವಿಜಯನಗರ ಜಿಲ್ಲೆಯವರಾಗಿದ್ದು, ಅವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗೆಗಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಪ್ರಕರಣ ದಾಖಲು: ಮಲ್ಪೆ ಪೊಲೀಸ್ ಠಾಣೆಗೆ ಮಹಿಳೆಯನ್ನು ಕರೆತಂದು ವಿಚಾರಣೆ ನಡೆಸಲಾಗಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳಾದ ಲಕ್ಷ್ಮಿಬಾಯಿ, ಸುಂದರ್, ಶಿಲ್ಪಾ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಬಗ್ಗೆ ಎಸ್ಪಿ ಹೇಳಿದ್ದಿಷ್ಟು: “ಮಹಿಳೆ ಮೇಲೆ ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆಯಿಂದ ದೂರನ್ನು ಪಡೆದುಕೊಂಡು, ಪ್ರಕರಣ ದಾಖಲಿಸಲಾಗಿದೆ. ವಿಡಿಯೋದಲ್ಲಿ ಹಲ್ಲೆ ನಡೆಸಿರುವ ಲಕ್ಷ್ಮಿಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೊಬ್ಬ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇನ್ನು ವೈರಲ್ ಆದ ವಿಡಿಯೋ ಪರಿಶೀಲಿಸಿ, ಅದರ ಆಧಾರದಲ್ಲಿ ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ತಪ್ಪಿತಸ್ಥರನ್ನು ಬಂಧಿಸುತ್ತೇವೆ” ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಕೆ. ತಿಳಿಸಿದರು.
Laxmi News 24×7