ಬೆಂಗಳೂರು: ಹುಬ್ಬಳ್ಳಿ – ಧಾರವಾಡ ಭಾಗದಲ್ಲಿ ಸುಪ್ರೀಂಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪಿಸಬೇಕು ಎಂದು ಕಾಂಗ್ರೆಸ್ ಶಾಸಕ ಎನ್.ಹೆಚ್.ಕೋನರೆಡ್ಡಿ ಒತ್ತಾಯಿಸಿದ್ದಾರೆ.
ವಿಧಾನಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾನೂನು ತಗಾದೆಗಳಿಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ವರೆಗೂ ಹೋರಾಟ ನಡೆಸಬೇಕಾದ ಸಂದರ್ಭ ಬಂದಾಗ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಸುಪ್ರೀಂಕೋರ್ಟ್ ವಿಭಾಗೀಯ ಪೀಠವನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದರು.
ಇದಕ್ಕೆ ಇತರ ಶಾಸಕರು ಬೆಂಗಳೂರಿನಲ್ಲಿ ವಿಭಾಗೀಯ ಪೀಠವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಹುಬ್ಬಳ್ಳಿ ಕಿಮ್ಸ್ಗೆ 100 ಕೋಟಿ ರೂ. ಅನುದಾನ ನೀಡಬೇಕು ಎಂದು ಹೇಳಿದರು.
ಚರ್ಚೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಈ ಬಾರಿಯದ್ದು ಹುಸಿ ಬಜೆಟ್ ಆಗಿದೆ. ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಹಚ್ಚಿದಂತಾಗಿದೆ ಎಂದು ಟೀಕಿಸಿದರು.
ವಿಶೇಷಚೇತನ ಮಕ್ಕಳಿಗೆ ತರಬೇತಿ ಕೊಡಿ: ವಿಶೇಷಚೇತನ ಮಕ್ಕಳ ಪಾಲನೆಗೆ ಹೆಚ್ಚಿನ ಒತ್ತು ನೀಡಬೇಕು. ಇತ್ತೀಚೆಗೆ ಪ್ಯಾರಾ ಒಲಿಂಪಿಕ್ ಸ್ಪರ್ಧೆಯಲ್ಲಿ ವಿಶೇಷಚೇತನ ಮಕ್ಕಳು 33ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದ್ದಾರೆ. ಅವರಿಗೆ ತರಬೇತಿ ಕೊಟ್ಟು ವಿದೇಶದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಮಾಡುವುದು ಸುಲಭದ ವಿಚಾರವಲ್ಲ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ವಿಶೇಷಚೇತನ ಮಕ್ಕಳ ಶಿಕ್ಷಕರಿಗೆ ನೆರವು ನೀಡಬೇಕು. ಅಲ್ಲದೇ, ಮಹಿಳೆಯರ ಸಬಲೀಕರಣಕ್ಕೆ ಸಾಲ ಸೌಲಭ್ಯ ನೀಡಿ, ಉದ್ಯೋಗ ಅವಕಾಶಗಳನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
Laxmi News 24×7