ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದ 33ನೇ ನುಡಿಹಬ್ಬವು ವಿವಿ ಆವರಣದ ನವರಂಗ ಬಯಲು ರಂಗಮಂದಿರದಲ್ಲಿ ಶುಕ್ರವಾರ ಸಂಜೆ ನಡೆಯಿತು. ಈ ವೇಳೆ ಗಣನೀಯ ಸಾಧನೆ ಮಾಡಿದ ಮೂವರಿಗೆ ನಾಡೋಜ ಗೌರವ ಪದವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ಶಿವರಾಜ್ ವಿ. ಪಾಟೀಲ್, ಖ್ಯಾತ ಬರಹಗಾರ, ಚಿಂತಕ ಕುಂ.ವೀರಭದ್ರಪ್ಪ (ಕುಂ.ವೀ) ಹಾಗೂ ಖ್ಯಾತ ಹಿಂದೂಸ್ತಾನಿ ಗಾಯಕ ಪದ್ಮಶ್ರೀ ಎಂ.ವೆಂಕಟೇಶ್ ಕುಮಾರ್ ಅವರಿಗೆ ನಾಡೋಜ ಗೌರವ ಪ್ರದಾನ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ.ಸಿ. ಸುಧಾಕರ್ ಅವರು ವಿಶ್ವವಿದ್ಯಾಲಯದಲ್ಲಿ ಪಿಹೆಚ್ಡಿ ಅಧ್ಯಯನವನ್ನು ಕೈಗೊಂಡ 190 ಸಂಶೋಧನಾರ್ಥಿಗಳಿಗೆ ಪಿಹೆಚ್ಡಿ ಪದವಿ ಪ್ರದಾನ ಮಾಡಿದರು.ಇದಾದ ಬಳಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯಪಾಲರು, “ಅಭಿವೃದ್ಧಿ ಹೊಂದಿದ ದೇಶಗಳು ಶಿಕ್ಷಣವನ್ನು ಮಾತೃಭಾಷೆ ಹಾಗೂ ಪ್ರಾದೇಶಿಕ ಮಾಧ್ಯಮದಲ್ಲಿ ನೀಡುತ್ತಿದ್ದು, ಕೇಂದ್ರ ಸರ್ಕಾರದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಇದಕ್ಕೆ ಆದ್ಯತೆ ನೀಡಿದೆ. ಒಬ್ಬ ಶಿಕ್ಷಕನು ಜ್ಞಾನವನ್ನು ಕೊಡುವುದರ ಜತೆಗೆ ವಿದ್ಯಾರ್ಥಿಗಳಿಗೆ ನಿಜವಾದ ಮಾರ್ಗದರ್ಶಕನಾಗಿರುತ್ತಾನೆ. ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಜೀವನವನ್ನು ಸುಧಾರಿಸುವಲ್ಲಿ ಪ್ರಮುಖ ಕೊಡುಗೆ ನೀಡಿದೆ. ಘಟಿಕೋತ್ಸವವು ವಿದ್ಯಾರ್ಥಿ ಜೀವನದ ಅತ್ಯಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ಇಲ್ಲಿ ಪಡೆದ ಜ್ಞಾನ ಮತ್ತು ಕೌಶಲ್ಯ, ಪ್ರಸ್ತುತ ಕಾಲದ ಸವಾಲುಗಳನ್ನು ಎದುರಿಸಲು ಮತ್ತು ಉದಯೋನ್ಮುಖ ಅವಕಾಶಗಳ ಲಾಭವನ್ನು ಪಡೆಯಲು ಸಹಕಾರಿಯಾಗಲಿದೆ” ಎಂದು ತಿಳಿಸಿದರು.
Laxmi News 24×7