ಹಾವೇರಿ: “ರಾಜ್ಯದಲ್ಲಿರುವ ದುಷ್ಟ ಭ್ರಷ್ಟ ಅನಿಷ್ಟ ಕನಿಷ್ಠ ಸರ್ಕಾರವನ್ನು ಕಿತ್ತೊಗೆಯಲು ನಮ್ಮ ಹೋರಾಟ ನಿರಂತರವಾಗಿರುತ್ತದೆ” ಎಂದು ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಹಾವೇರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
“ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ನಿತ್ಯ ಒಂದಿಲ್ಲಾ ಒಂದು ರೂಪದಲ್ಲಿ ಒಂದಿಲ್ಲಾ ಒಂದು ರೀತಿಯಲ್ಲಿ ಹೋರಾಟ ಮಾಡೋಣ. ರಾಜ್ಯದಲ್ಲಿ ಜನರ ಆಕ್ರೋಶ ಈಗ ಮುಗಿಲುಮುಟ್ಟಿದೆ. ಜನರ ಈ ಆಕ್ರೋಶವೇ ಈ ಸರ್ಕಾರವನ್ನು ಕಿತ್ತೊಗೆಯುತ್ತದೆ. ಈ ಹೋರಾಟದಲ್ಲಿ ಜಯ ನಮ್ಮದೆ. 2028ಕ್ಕೆ ಮತ್ತೆ ನಮ್ಮದೇ ಸರ್ಕಾರ. ಜನರಿಂದ ಜನರಿಗಾಗಿ ಜನರಿಗೋಸ್ಕರ ಇರುವ ಜನಪರ ಬಿಜೆಪಿ ಸರ್ಕಾರವನ್ನು ಆಡಳಿತಕ್ಕೆ ತರೋಣ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ಹಾವೇರಿಗೆ ಇದೇ 21ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ಜನಾಕ್ರೋಶ ಯಾತ್ರೆ ಆಗಮಿಸಲಿದೆ. ಈ ಜನಾಕ್ರೋಶ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಯಾಗಿಸಬೇಕು” ಎಂದು ಮನವಿ ಮಾಡಿದರು.”ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರದ ಮೇಲೆ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಸುಳ್ಳು ಆರೋಪ ಮಾಡಿ, ಈಗ ಇವರೇ 60 ಪರ್ಸೆಂಟ್ ಕಮಿಷನ್ ಹೊಡೆಯುತ್ತಿದ್ದಾರೆ. ಸರ್ಕಾರ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದೆ. ಜೊತೆಗೆ ವಿವಿಧ ತೆರಿಗೆ ಏರಿಕೆ ಮಾಡಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದೆ” ಎಂದು ಆರೋಪಿಸಿದರು.
Laxmi News 24×7