ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿಯ ಜನಾಕ್ರೋಶ ಪ್ರತಿಭಟನೆಗೆ ಪ್ರತಿಯಾಗಿ, ನಗರದ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ನಿಂದ ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ನಿರಂತರ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಎಲ್ಪಿಜಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸೇರಿದಂತೆ ಕೇಂದ್ರದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು.
ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ತಯಾರಾಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ”ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆ ₹50 ಏರಿಕೆ ಮಾಡಿದ್ದಾರೆ. ಅದು ಲಜ್ಜೆಗೆಟ್ಟ ಸರ್ಕಾರವಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್ಗೆ ಪ್ರತಿಭಟನೆ ಮಾಡುವ ಯಾವುದೇ ನೈತಿಕತೆ ಇಲ್ಲ. ಅವರಿಗೆ ಮಾನ, ಮರ್ಯಾದೆ ಇದ್ದರೆ ಪ್ರತಿಭಟನೆ ಮಾಡುತ್ತಿರಲಿಲ್ಲ. ಅವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ” ಎಂದು ವಾಗ್ದಾಳಿ ನಡೆಸಿದರು.
‘ಮೋದಿ ಅವರು ಅಚ್ಚೇ ದಿನ ಆಯೇಗಾ ಅಂತ ಹೇಳಿದ್ದರು. ಆದರೆ ಒಳ್ಳೆಯ ದಿನ ಬಂತಾ?. ಆದರೆ, ಎಲ್ಲ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ಸಿಮೆಂಟ್ ಬೆಲೆ, ಪಿವಿಸಿ ಪೈಪ್ ಬೆಲೆ, ಸಕ್ಕರೆ ಬೆಲೆ, ಬೇಳೆ ಕಾಳುಗಳ ಬೆಲೆ, ಉಪ್ಪು ಬೆಲೆ, ಅಕ್ಕಿ, ರಾಗಿ ಬೆಲೆಗಳು ಏರಿಕೆಯಾಗಿದೆ. ಡಾಲರ್ ಮುಂದೆ ರೂಪಾಯಿ ಮೌಲ್ಯ ಹೆಚ್ಚಳವಾಗಿದೆ” ಎಂದು ಕಿಡಿಕಾರಿದರು.
ಬಿಜೆಪಿಯವರು ರೈತರ ವಿರೋಧಿಗಳು: ”ಬಡವರ ಬಗ್ಗೆ ಮಾತನಾಡುತ್ತಿರುವ ಮೋದಿಯವರು ಅಡುಗೆ ಸಿಲಿಂಡರ್ ಮೇಲಿನ ಸಹಾಯಧನವನ್ನು ಏಕೆ ತೆಗೆದು ಹಾಕಿದ್ದೀರಿ. ಗ್ಯಾರಂಟಿ ಯೋಜನೆಗೆ ವಾರ್ಷಿಕ 52,000 ಕೋಟಿ ರೂ. ಹಣ ಮೀಸಲಿಟ್ಟಿದ್ದೇವೆ. ಬೆಲೆ ಏರಿಕೆಗೆ ನರೇಂದ್ರ ಮೋದಿ ಕಾರಣ. ನಮ್ಮ ವಿರುದ್ಧ ಹೋರಾಟ ಮಾಡುವ ನೈತಿಕ ಹಕ್ಕಿಲ್ಲ. ಹಾಲಿನ ಬೆಲೆ ಏರಿಕೆ ಮಾಡುವಂತೆ ರೈತರು ಮನವಿ ಮಾಡುತ್ತಿದ್ದರು. ಅದಕ್ಕಾಗಿ ಹಾಲಿನ ಬೆಲೆ ಏರಿಕೆ ಮಾಡಿದ್ದೇವೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಹಾಲಿನ ದರ ಕಡಿಮೆ ಇದೆ. ಬಿಜೆಪಿಯವರು ರೈತರ ವಿರೋಧಿಗಳು. ಅದಕ್ಕಾಗಿ ಹಾಲಿನ ದರ ಏರಿಕೆ ವಿರುದ್ಧ ಹೋರಾಟ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು
Laxmi News 24×7