ಬೆಂಗಳೂರು: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದು ಪೊಲೀಸ್ ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ ಬಿಹಾರದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎಂಬಾತನ ಮೃತದೇಹವನ್ನು ಸಮಾಧಿ ಮಾಡಲು ಹೈಕೋರ್ಟ್ ಇಂದು ಅನುಮತಿ ನೀಡಿತು.
ರಿತೇಶ್ ಕುಮಾರ್ ಮೃತದೇಹ ಇಡೀ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿದೆ. ಮೃತದೇಹವನ್ನು ದಹನ ಮಾಡದಂತೆ ಹಾಗೂ ಸಂರಕ್ಷಿಸಿಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಪಿಯುಸಿಎಲ್ ಸಂಘಟನೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. ಶುಕ್ರವಾರ ಈ ಕುರಿತು ಸಮಗ್ರ ಆದೇಶ ಹೊರಡಿಸಲಾಗುವುದು ಹೇಳಿದೆ.
ಏಪ್ರಿಲ್ 24ರಂದು ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು ಹೈಕೋರ್ಟ್ ನಿರ್ದೇಶನದಂತೆ ಮೇ 15ರಂದು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮೃತದೇಹದ ಭಾಗಗಳ ಮಾದರಿಯನ್ನು ಸಂಗ್ರಹಿಸಿ, ಸಂರಕ್ಷಿಸಲಾಗಿದೆ. ಏ.14ರಿಂದ ಮೃತನ ಶವವನ್ನು ಸಂರಕ್ಷಣೆ ಮಾಡಲಾಗುತ್ತಿದೆ. ಎಲ್ಲಾ ಪ್ರಯತ್ನಗಳ ಹೊರತಾಗಿಯೂ ಸದ್ಯ ಶವ ಕೊಳೆತಿರುವ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ, ಶವವನ್ನು ಸಮಾಧಿ ಮಾಡಬೇಕಿದೆ. ಮುಂದೆ ತನಿಖೆಗೆ ಅಗತ್ಯಬಿದ್ದಲ್ಲಿ ಶವವನ್ನು ಹೊರತೆಗೆಯಬಹುದು. ಶವವನ್ನು ಮತ್ತಷ್ಟು ಕೊಳೆಯುವುದನ್ನು ತಡೆಯಲು ಸಮಾಧಿ ಮಾಡುವ ಅಗತ್ಯವಿದೆ ಎಂದು ಮನವಿ ಮಾಡಿದ್ದರು.
Laxmi News 24×7