ನೆಲಮಂಗಲ (ಬೆಂಗಳೂರು ಗ್ರಾಮಾಂತರ) : ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ನಡುವಿನ ಭೀಕರ ಅಪಘಾತದಿಂದ ಆಟೋದಲ್ಲಿದ್ದ 6 ಜನರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನೆಲಮಂಗದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 75 ಕುಣಿಗಲ್ ರಸ್ತೆಯ ನೆಲಮಂಗಲದ ಮಲ್ಲರಬಾಣವಾಡಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ತಾಲ್ಲೂಕಿನ ಶಾಂತಿನಗರ ನಿವಾಸಿ ಹಾಗೂ ಆಟೋ ಚಾಲಕ ಶ್ರೀನಿವಾಸ್ (45), ಪುಟ್ಟಮ್ಮ (55), 13 ವರ್ಷದ ಬಾಲಕಿ ಮೃತರು. ಗಂಭೀರ ಗಾಯಗೊಂಡಿರುವ ವೆಂಕಟೇಶ್ (37), ನಾಗರತ್ನಮ್ಮ (38), 11 ವರ್ಷದ ಬಾಲಕಿ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಟೋದಲ್ಲಿ ಪ್ರಯಾಣಿಸುತ್ತಿದ್ದವರು ಯಶವಂತಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಶುಭ ಕಾರ್ಯಕ್ರಮವೊಂದಕ್ಕೆ ಇವರು ತೆರಳಿದ್ದರು. ಇಂದು ಶಾಂತಿನಗರದಿಂದ ನೆಲಮಂಗಲಕ್ಕೆ ಆಟೋದಲ್ಲಿ ಬರುವಾಗ ಮಲ್ಲರಬಾಣರವಾಡಿ ಕ್ರಾಸ್ ಬಳಿ ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಳಿಕ ನೆಲಮಂಗಲ ಸಂಚಾರಿ ಪೊಲೀಸರು, ಟೋಲ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕೂಡಲೇ ಗಾಯಾಳುಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಕಳಿಸಿದರು. ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿದರು. ಕ್ರೇನ್ ಮೂಲಕ ಆಟೋ ಮತ್ತು ಬಸ್ಸನ್ನು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7