ಹುಬ್ಬಳ್ಳಿ: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನಕ್ಕೆ ಮುಂದಾಗಿ ಬಳಿಕ ಹತ್ಯೆಗೈದು ಪೊಲೀಸ್ ಎನ್ಕೌಂಟರ್ಗೆ ಬಲಿಯಾದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಅಂತ್ಯಸಂಸ್ಕಾರ ಇಂದು ನಡೆಯಿತು. ಸಿಐಡಿ ಎಸ್ಪಿ ವೆಂಕಟೇಶ ಎನ್ ಸಮ್ಮುಖದಲ್ಲಿ ಬಿಡನಾಳ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆದಿದ್ದು, ಸಿಐಡಿ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡರು.
ಏ. 13ರಂದು ರಿತೇಶ್ ಕುಮಾರ್ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ ಶೌಚಾಲಯದೊಳಗೆ ಹತ್ಯೆ ಮಾಡಿ ಪರಾರಿಯಾಗಿದ್ದ. ಸಾರ್ವಜನಿಕರು ರೊಚ್ಚಿಗೆದ್ದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಎಲ್ಲೆಡೆ ತೀವ್ರ ರೀತಿಯಲ್ಲಿ ಪ್ರತಿಭಟನೆಗಳು ನಡೆದಿದ್ದವು. ಇದರಿಂದ ಒತ್ತಡಕ್ಕೆ ಮಣಿದ ಅಶೋಕ ನಗರ ಠಾಣೆ ಪೊಲೀಸರು ಸಂಜೆ ವೇಳೆಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಆರೋಪಿ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಆತ ಇದ್ದ ಶೆಡ್ ಬಳಿ ಕರೆದುಕೊಂಡು ಹೋಗಿದ್ದರು. ಈ ವೇಳೆ ರಾಯನಾಳ ಬ್ರಿಡ್ಜ್ ಬಳಿ ರಿತೇಶ್ ಕುಮಾರ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದರೂ ರಿತೇಶ್ ಪರಾರಿಯಾಗುವ ತನ್ನ ಪ್ರಯತ್ನ ಮುಂದುವರೆಸಿದ್ದ. ಆಗ ಪೊಲೀಸರು ಗುಂಡು ಹಾರಿಸಿದ್ದರಿಂದ ಆತ ಮೃತಪಟ್ಟಿದ್ದ.ಈ ನಡುವೆ ಆರೋಪಿಯ ಶವ ಅಂತ್ಯಸಂಸ್ಕಾರ ಮಾಡಬಾರದು, ಸಾಕ್ಷ್ಯ ನಾಶವಾಗಬಹುದು ಎಂದು ಕೋರಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಹಾಗಾಗಿ ಎನ್ಕೌಂಟರ್ಗೆ ಬಲಿಯಾದ ರಿತೇಶ್ ಮೃತದೇಹವನ್ನು ಕೆಎಂಸಿಆರ್ಐ ಶವಾಗಾರದ ಕೋಲ್ಡ್ ಸ್ಟೋರೇಜ್ನಲ್ಲಿ ಇಡಲಾಗಿತ್ತು. ಈ ನಡುವೆ ಶವ ಕೊಳೆಯುತ್ತಾ ಬಂದ ಹಿನ್ನೆಲೆ ಸಿಐಡಿ ಪೊಲೀಸರಿಗೆ ಶವ ಡಿಕಾಂಪೋಸ್ ಆಗುತ್ತಿದೆ, ಆದ ಕಾರಣ ಇದನ್ನು ವಶಕ್ಕೆ ಪಡೆಯುವಂತೆ ಕೆಎಂಸಿಆರ್ಐ ಪತ್ರ ಬರೆದಿತ್ತು. ಸಿಐಡಿ ಪೊಲೀಸರು ಶವದ ಸಮಾಧಿ ಮಾಡುವ ಅಗತ್ಯವಿದೆ, ಶವ ಕೊಳೆಯುತ್ತಿದೆ ಎಂದು ಕೋರ್ಟ್ಗೆ ಮಾಹಿತಿ ನೀಡಿದ್ದರು. ವಿಚಾರಣೆ ನಡೆಸಿರುವ ಕೋರ್ಟ್, ಅಂತ್ಯಸಂಸ್ಕಾರ ಮಾಡಲು ಇತ್ತೀಚೆಗೆ ಅನುಮತಿ ನೀಡಿತ್ತು.
Laxmi News 24×7