ಮೈಸೂರು: ಶಕ್ತಿ ಯೋಜನೆಯಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪ್ರಶಂಸಿಸಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದಿದ್ದರು. ಗ್ಯಾರಂಟಿ ಯೋಜನೆಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ. ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಸರ್ಕಾರದ ಎರಡು ವರ್ಷದ ಕಾರ್ಯಕ್ರಮಕ್ಕೆ ಸುಮಾರು 3ರಿಂದ 4 ಲಕ್ಷ ಜನ ಆಗಮಿಸಿದ್ದರು. ಆದರೆ ಬಿಜೆಪಿಯವರು ಜನಾಕ್ರೋಶ ಕಾರ್ಯಕ್ರಮ ಮಾಡಿ ಅಭಿವೃದ್ಧಿ ನಡೆಯುತ್ತಿಲ್ಲ, ಬೆಲೆ ಏರಿಕೆಯಾಗಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೆ.ಆರ್.ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದರು.ಕೆ.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ 404 ಕೋಟಿ ರೂ.ಗಳ ಶಂಕುಸ್ಥಾಪನೆ, 109 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಸೇರಿ ಒಟ್ಟು 513 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿದ್ದು, ಇದಕ್ಕೆ ಸ್ಥಳೀಯ ಶಾಸಕರಾದ ರವಿಶಂಕರ್ ಕಾರಣ. ಸಣ್ಣ ನೀರಾವರಿ ಸಚಿವರು 197 ಕೋಟಿ ರೂ.ಗಳ ವೆಚ್ಚದ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ತಮ್ಮ ಇಲಾಖೆಯೊಂದರಲ್ಲಿಯೇ ಮಾಡಿದ್ದಾರೆ. ಆರೋಗ್ಯ ಇಲಾಖೆಯಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ನೆರವೇರಿದೆ ಎಂದು ತಿಳಿಸಿದರು.
Laxmi News 24×7