ಹಾವೇರಿ: ಹಾವೇರಿ ಗೋಲಿಬಾರ್ ನಡೆದು ಇಂದಿಗೆ 17 ವರ್ಷ. 2008ರ ಜೂನ್ 10 ರಂದು ಗೊಬ್ಬರಕ್ಕಾಗಿ ಹಾವೇರಿಯಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆ ನಿಯಂತ್ರಣಕ್ಕೆ ಸಿಗದಿದ್ದಾಗ ಪೊಲೀಸರು ಗೋಲಿಬಾರ್ ನಡೆಸಿದ್ದರು. ಗೋಲಿಬಾರ್ಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಿದ್ದಲಿಂಗಪ್ಪ ಚೂರಿ ಮತ್ತು ಪುಟ್ಟಪ್ಪ ಹೊನ್ನತ್ತಿ ಎನ್ನುವವರು ಸಾವನ್ನಪ್ಪಿದ್ದರು.
ಘಟನೆಯಲ್ಲಿ 10ಕ್ಕೂ ಅಧಿಕ ಜನ ಗುಂಡೇಟಿನಿಂದ ಗಾಯಗೊಂಡಿದ್ದರು. ಈ ಘಟನೆ ನಡೆದು ಇಂದಿಗೆ 17 ವರ್ಷ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ವಿವಿಧ ರೈತ ಸಂಘಟನೆಗಳು ಇಂದು ರೈತ ಹುತಾತ್ಮ ದಿನಾಚರಣೆ ಆಚರಿಸಿದವು. ಸಿದ್ದಲಿಂಗಪ್ಪ ಚೂರಿ ಮತ್ತು ಪುಟ್ಟಪ್ಪ ಹೊನ್ನತ್ತಿ ಅವರ ಸಮಾಧಿಗೆ ತೆರಳಿ ಮಾಲಾರ್ಪಣೆ ಮಾಡಲಾಯಿತು. ನಂತರ ಗೋಲಿಬಾರ್ ನಡೆದ ಸ್ಥಳದಲ್ಲಿರುವ ರೈತ ಹುತಾತ್ಮ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಲಾಯಿತು.ಪೂಜೆ ಸಲ್ಲಿಸಿದ ರೈತರು ಎರಡು ನಿಮಿಷ ಮೌನಾಚರಣೆ ಮಾಡಿದರು. ವಿವಿಧ ರೈತ ಸಂಘಟನೆಗಳ ಮುಖ್ಯಸ್ಥರು ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ್, ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಸೇರಿದಂತೆ ವಿವಿಧ ರೈತ ಮುಖಂಡರು ಪಾಲ್ಗೊಂಡಿದ್ದರು.
Laxmi News 24×7