ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ದರ್ಶನ ಪ್ಯಾಕೇಜ್ಗಾಗಿ 2000 ರೂಪಾಯಿ ಟಿಕೆಟ್ ದರ ನಿಗದಿ ಮಾಡಿರುವುದು ಅತ್ಯಂತ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿ, ಹಳೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ದೇವರ ದರ್ಶನಕ್ಕೆ ಸರ್ಕಾರ ಇಷ್ಟೊಂದು ದುಬಾರಿ ಟಿಕೆಟ್ ಮಾಡಲು ಹೊರಟಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಜನರಿಗೆ ಒಂದು ಕೈಯಲ್ಲಿ ಕೊಟ್ಟು ದೇವರ ಹೆಸರಿನಿಂದ ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ಕೂಡಲೇ 2000 ರೂ. ದುಬಾರಿ ಟಿಕೆಟ್ ಅನ್ನು ರದ್ದುಗೊಳಿಸಿ (ಹಿಂಪಡೆದು) ಪ್ರತಿಯೊಬ್ಬರಿಗೂ ಹಣದ ಭೇದ ಭಾವವಿಲ್ಲದೆ ಕಳೆದ ವರ್ಷದಂತೆ ದರ್ಶನ ಸಿಗುವಂತೆ ಮಾಡಬೇಕೆಂದು ಒತ್ತಾಯಿಸಿದರು.
ಚಾಮುಂಡಿ ಬೆಟ್ಟದಲ್ಲಿ ಸ್ಥಳೀಯ ನಿವಾಸಿಗಳಿಗೆ ಕುಡಿಯುವ ನೀರು, ಆಷಾಢದಲ್ಲಿ ಆಗಮಿಸುವ ಭಕ್ತರಿಗೆ ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಹಾಗೂ ಚಾಮುಂಡೇಶ್ವರಿ ದೇವಾಲಯದಲ್ಲಿ ಸೇವೆಗಳ ಶುಲ್ಕಗಳನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ಖಂಡಿಸಲಾಯಿತು.
ನಾಡ ದೇವತೆ ಚಾಮುಂಡೇಶ್ವರಿ ಬೆಟ್ಟದಲ್ಲಿ ಸರಿಯಾಗಿ ಕುಡಿಯುವ ನೀರಿಲ್ಲ. ಐದಾರು ದಿನಗಳಿಗೊಮ್ಮೆ ಚಾಮುಂಡಿ ಬೆಟ್ಟಕ್ಕೆ ನೀರನ್ನು ಬಿಡಲಾಗುತ್ತಿದೆ. ನೀರಿಲ್ಲದೆ ಅಲ್ಲಿನ ಸ್ಥಳೀಯ ನಿವಾಸಿಗಳು ನಿತ್ಯ ಪರದಾಡುತ್ತಿದ್ದಾರೆ. ಬಹಳ ವರ್ಷಗಳ ಹಿಂದೆಯೇ ಕುಡಿಯುವ ನೀರಿಗಾಗಿ ಬೆಟ್ಟಕ್ಕೆ ಹೊಸ ಪೈಪ್ ಲೈನ್ ಅನ್ನು ಹಾಕಲು ಕಾಮಗಾರಿ ಶುರು ಮಾಡಿದರೂ, ಇನ್ನೂ ಪೂರ್ಣವಾಗಿ ಕೆಲಸ ಮುಗಿದಿಲ್ಲ. ಪರಿಣಾಮ ಬೆಟ್ಟದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗುತ್ತಿದೆ. ಬೆಟ್ಟಕ್ಕೆ ಸಮರ್ಪಕವಾಗಿ ದಿನಾಲೂ ನೀರು ಒದಗಿಸಬೇಕು ಎಂದು ಆಗ್ರಹಿಸಿದರು.
Laxmi News 24×7