Breaking News

ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿದು ಕ್ರಿಪ್ಟೋದಲ್ಲಿ ಹೂಡಿಕೆ ಮಾಡುತ್ತಿದ್ದ ಮಾಜಿ ಕಾನ್​ಸ್ಟೇಬಲ್ ನಿಂಗಪ್ಪ

Spread the love

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಯ ಭೀತಿ ಹುಟ್ಟಿಸಿ ಸರ್ಕಾರಿ ಅಧಿಕಾರಿಗಳಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಹಣ ಪಡೆಯುತ್ತಿದ್ದುದಾಗಿ ಮಾಜಿ ಪೊಲೀಸ್ ಹೆಡ್ ​ಕಾನ್‌ಸ್ಟೇಬಲ್​ ನಿಂಗಪ್ಪ ತನಿಖಾಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾನೆ.

ಚಿತ್ರದುರ್ಗದ ನಿಂಗಪ್ಪ ಅಲಿಯಾಸ್ ಸಾವಂತ್ ವಿರುದ್ಧ ಲೋಕಾಯುಕ್ತ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದಾಗ, ತಾನು ಕಳೆದ ಆರು ತಿಂಗಳಿಂದ ಹಣ ಪಡೆದಿದ್ದು, ಇದೇ ಹಣವನ್ನು ಸಂಬಂಧಿಕರ ಹೆಸರಿನಲ್ಲಿ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದ ನಿಂಗಪ್ಪ: ಸರ್ಕಾರಿ ಅಧಿಕಾರಿಗಳಿಗೆ ದಾಳಿ ಮಾಡುವ ಭಯ ಹುಟ್ಟಿಸಿ ಅವರಿಂದ ಆರು ತಿಂಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಾರೆ. ಈ ಹಣವನ್ನು ಸಂಬಂಧಿಕರ ಹೆಸರಿನಲ್ಲಿ 13 ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿರುವ ವಿಚಾರ ನಿಂಗಪ್ಪನ ಮೊಬೈಲ್​ನಲ್ಲಿ ಪತ್ತೆಯಾಗಿದೆ. ಹಣದ ಮೂಲ ಪತ್ತೆ ಹಚ್ಚಲು ಕ್ರಿಪ್ಟೋ ವ್ಯಾಲೆಟ್​ಗಳನ್ನು ಫ್ರೀಜ್​ ಮಾಡಿಸಲಾಗಿದೆ. ಯಾವ್ಯಾವ ಅಧಿಕಾರಿಗಳಿಂದ ಎಷ್ಟೆಷ್ಟು ಹಣ ಪಡೆದಿದ್ದರು ಎಂಬುದರ ಕುರಿತು ಹೆಚ್ಚಿನ ತನಿಖೆ ಕೈಗೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿಯೊಂದಿಗೆ ಸರ್ಕಾರಿ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ವಾಟ್ಸ್‌ಆ್ಯಪ್ ಸಂದೇಶಗಳು, ಕರೆ ವಿವರಗಳು ಹಾಗೂ ವಾಟ್ಸ್‌ಆ್ಯಪ್​ ಕರೆಗಳ ಬಗ್ಗೆ ಮಾಹಿತಿ ಶೋಧಿಸಲಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನ್ಯ ವ್ಯಕ್ತಿಗಳು ಲೋಕಾಯುಕ್ತ ಸಂಸ್ಥೆ ದುರ್ಬಳಕೆ ಮಾಡಿಕೊಂಡಿರುವುದು ಕಂಡುಬಂದಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಬಳ್ಳಾಪುರ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದೆಲ್ಲೆಡೆ 2022ರಿಂದ ಈವರೆಗೂ 35 ಪ್ರಕರಣಗಳು ದಾಖಲಾಗಿವೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ