ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ 187 ಕೋಟಿ ರೂ. ಬೆಲೆಬಾಳುವ 116.17 ಎಕರೆ ಜಮೀನನ್ನು ಕೇವಲ 50 ಕೋಟಿ ರೂ.ಗೆ ಸೆಂಟರ್ ಫಾರ್ ಎಜುಕೇಷನ್ ಆ್ಯಂಡ್ ಸೋಷಿಯಲ್ ಸ್ಟಡೀಸ್ (ಸಿಇಎಸ್ಎಸ್) ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ (ಪ್ರಾಸಿಕ್ಯೂಷನ್) ಪೂರ್ವಾನುಮತಿ ಕೋರಿ ಸಲ್ಲಿಸಿರುವ ಅರ್ಜಿ ಇತ್ಯರ್ಥಪಡಿಸಲು ವಿಳಂಬ ಮಾಡುತ್ತಿರುವ ಸಂಬಂಧ ರಾಜ್ಯಪಾಲರ ಕಚೇರಿ ಮತ್ತು ಲೋಕಾಯುಕ್ತ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ದೂರುದಾರರಾಗಿರುವ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹ ಮೂರ್ತಿ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಪೀಠ ಈ ಆದೇಶ ಮಾಡಿದೆ.
ಅರ್ಜಿಯ ವಿವರ: ದೇವನಹಳ್ಳಿಯ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶದಲ್ಲಿ ಶೈಕ್ಷಣಿಕ ಉದ್ದೇಶಕ್ಕೆಂದು 130 ಎಕರೆ ಜಮೀನು ಮಂಜೂರು ಮಾಡುವಂತೆ ಕೋರಿ ಸಿಇಎಸ್ಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ ರೆಡ್ಡಿ 2021ರ ಮಾರ್ಚ್ 25ರಂದು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಅರ್ಜಿ ಸಲ್ಲಿಸಿದ್ದರು. ಆನ್ಲೈನ್ ಮೂಲಕ ಶಾಸನಾತ್ಮಕ ಸಮಿತಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಯಡಿಯೂರಪ್ಪ ಸೂಚಿಸಬೇಕಿತ್ತು. ಅದರ ಬದಲು ಅರ್ಜಿಯನ್ನು ಸಂಪುಟದ ಮುಂದಿಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಯಡಿಯೂರಪ್ಪ ನಿರ್ದೇಶಿಸಿದ್ದರು ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.