ಹಾವೇರಿ : ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ಅಧಿಕಾರಿಗಳ ವರ್ಗಾವಣೆಗೆ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.
ಪ್ರಾಮಾಣಿಕ ಅಧಿಕಾರಿಗಳ ನೈತಿಕತೆ ಕುಂದಿದೆ. ಆಡಳಿತ ಪಕ್ಷದ ಶಾಸಕರು ಮಾತಾಡಿದ್ರೂ ಸಿಎಂ, ಡಿಸಿಎಂ ತುಟಿ ಪಿಟಕ್ ಅಂತಿಲ್ಲ. ಸಂಪುಟ ಸಹೋದ್ಯೋಗಿಗಳು ಬಹಿರಂಗವಾಗಿ ಪತ್ರ ಬರೆಯುತ್ತಾರೆ. ಸಚಿವ ಸಂಪುಟದಲ್ಲೂ ಸಾಮರಸ್ಯ, ವಿಶ್ವಾಸ ಇಲ್ಲ. ಮಳೆ ಬಂದರೂ ಪರಿಹಾರ ಇಲ್ಲ. ಯಾವುದೇ ರೀತಿ ಜನ ಸ್ಪಂದನೆ ಕೆಲಸ ಆಗ್ತಾ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.ಇಡೀ ಆಡಳಿತದ ವಿರುದ್ಧ ಜನಾಂದೋಲನ ಪ್ರಾರಂಭ ಆಗಲಿದೆ. ಯಾವ್ಯಾವ ಪ್ರದೇಶಗಳಲ್ಲಿ ಯಾವ ವಿಷಯ ಎತ್ತಿ ಜನಾಂದೋಲನ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ, ಚಿಂತನ- ಮಂಥನಕ್ಕೆ ಅಮಿತ್ ಶಾ ಅವರು ಸೂಚನೆ ನೀಡಿದ್ದಾರೆ. ಶೀಘ್ರದಲ್ಲೇ ಜನಾಂದೋಲನ ಪೂರ್ವಭಾವಿ ಸಭೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.